ETV Bharat / state

ಅಸ್ಸೋಂನಲ್ಲಿ ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕ ತೊಂದರೆ ಕೊಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Jan 24, 2024, 3:24 PM IST

Updated : Jan 24, 2024, 4:47 PM IST

ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಪ್ರತಿಭಟನೆ, ಪಾದಯಾತ್ರೆಗಳನ್ನು ಬಿಜೆಪಿ ಸಹಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

cm-siddaramaiah-reaction-on-bjp-over-nyaya-yatra
ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ಉದ್ದೇಶ ಪೂರ್ವಕವಾಗಿ ತೊಂದರೆ ಕೊಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: "ಅಸ್ಸೋಂನಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಪಿರಿಯಾಪಟ್ಟಣದ ಬಳಿಯ ಬೈಲಕುಪ್ಪೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಪ್ರತಿಭಟನೆ, ಪಾದಯಾತ್ರೆಗಳನ್ನು ಬಿಜೆಪಿ ಸಹಿಸುತ್ತಿಲ್ಲ. ದೇಶದ ಸಮಸ್ಯೆಗಳನ್ನು ತಿಳಿದುಕೊಳ್ಳಲು, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಅಗತ್ಯ ಭದ್ರತೆ ನೀಡಬೇಕಿರುವುದು ಕೇಂದ್ರ, ರಾಜ್ಯ ಸರ್ಕಾರಗಳ ಕರ್ತವ್ಯ" ಎಂದರು.

"ನೆಹರು ಕುಟುಂಬಕ್ಕೆ ಬೆದರಿಕೆ ಇದೆ. ಉದ್ದೇಶಪೂರ್ವಕವಾಗಿ ಭದ್ರತಾ ಲೋಪ ಮಾಡುತ್ತಿರುವುದು ಸರಿಯಲ್ಲ. ಅಸ್ಸೋಂ ಮುಖ್ಯಮಂತ್ರಿ ಮೊದಲು ಕಾಂಗ್ರೆಸ್‌ನಲ್ಲಿ ಇದ್ದರು. ಬಿಜೆಪಿಗೆ ಹೋಗಿ ಸಿಎಂ ಆಗಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದುಕೊಂಡು ಪಾದಯಾತ್ರೆ ತಡೆಯಲು ಪ್ರಚೋದನೆ ನೀಡುತ್ತಿದ್ದಾರೆ. ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮೆಚ್ಚಿಸಲು ಹೀಗೆಲ್ಲ ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ" ಎಂದು ಟೀಕಿಸಿದರು.

"ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ. ಕೇಂದ್ರದಿಂದ ಪರಿಹಾರದ ಹಣ ಬಂದಿಲ್ಲ. ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಎರಡು ತಿಂಗಳು ಹಿಂದೆಯೇ ಖುದ್ದಾಗಿ ಭೇಟಿ ನೀಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿ, ಬೇಗ ಪರಿಹಾರದ ಹಣ ಕೊಡಿ ಎಂದು ಕೋರಿದ್ದೆವು. ಒಮ್ಮೆ ಸಭೆ ಕರೆದು ಮುಂದೂಡಿದರು. ಪ್ರಧಾನಿ ಬೆಂಗಳೂರಿಗೆ ಬಂದಾಗಲೂ ಬರ ಪರಿಹಾರ ನೀಡುವಂತೆ ಹೇಳಿದ್ದೆ. ಸದ್ಯಕ್ಕೆ ನಾವೇ ಬರ ನಿರ್ವಹಣೆ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರ ಈವರೆಗೆ 2,000 ಕೋಟಿ ರೂ. ಖರ್ಚು ಮಾಡಿದ್ದೇವೆ. ಬರ ಪರಿಹಾರಕ್ಕೆ ಈಗ 550 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ರೈತರಿಗೆ ಮುಂದಿನ ವಾರ ಮೊದಲ ಕಂತಿನ ಹಣ ಹಾಕುತ್ತೇವೆ" ಎಂದು ತಿಳಿಸಿದರು.

ಬಿಜೆಪಿಯಲ್ಲಿ ಲೀಡರ್‌ಗಳು ಇಲ್ವಾ? - ಡಿಸಿಎಂ: ಮತ್ತೊಂದೆಡೆ, ಡಿಸಿಎಂ ಡಿ ಕೆ ಶಿವಕುಮಾರ್​ ಮಾತನಾಡಿ, "ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದಾರೆ. ಅವರನ್ನು ಮತ್ತೆ ವಾಪಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿಯವರು ಸಂಪರ್ಕಿಸುತ್ತಿದ್ದಾರೆ ಅಂದರೆ ಏನರ್ಥ?. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಯಾಕೆ ನಿಮ್ಮಲ್ಲಿ ಲೀಡರ್‌ಗಳು ಇಲ್ವಾ?. ಒಳ್ಳೆಯ ಅಭ್ಯರ್ಥಿಗಳು ಇದ್ದರೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಳ್ಳಿ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದವರು ಯಾರು?. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿದ್ದು ಯಾರು?. ಇದೆಲ್ಲವನ್ನೂ ರಾಜ್ಯ ರಾಜಕಾರಣ ನೋಡಿದೆ. ಈಗ ಅವರಿಬ್ಬರೂ ತಬ್ಬಿಕೊಳ್ಳುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುತ್ತಿದ್ದಾರೆ ಅಂದರೆ ಎರಡೂ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ ಎಂದರ್ಥ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ: ತಸ್ತೀಕ್ ಹಣ ವಾಪಸ್ ನೀಡುವಂತೆ ಕಣ್ಣನ್ ಅವರಿ​ಗೆ ನೋಟಿಸ್‌ ನೀಡಿದ್ದು ತಹಶೀಲ್ದಾರ್ ತಪ್ಪು: ಸಿಎಂ

Last Updated : Jan 24, 2024, 4:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.