ಕೊಪ್ಪಳ: ಕಳೆದ ಗುರುವಾರ ಸುರಿದ ಅಕಾಲಿಕ ಮಳೆಗೆ ಭತ್ತ, ಪಪ್ಪಾಯಿ, ಮೆಕ್ಕೆಜೋಳ ಬೆಳೆ ನಾಶವಾಗಿದೆ. 80 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆ ಜೋಳ, 285 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸರ್ಕಾರ ಸೂಕ್ತ ಪರಿಹಾರ ಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಗಂಗಾವತಿ, ಕಾರಟಗಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾಗದಲ್ಲಿ ಸುಮಾರು 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಶಿವರಾಜ್ ತಂಗಡಗಿ, ಪರಿಹಾರ ನೀಡುವುದಾಗಿ ರೈತರಿಗೆ ಭರವಸೆ ನೀಡಿದರು.
ಚುಕ್ಕನಕಲ್ ರೈತ ಪ್ರಕಾಶ ಮಾತನಾಡಿ, "ಗಾಳಿ ಮಳೆಗೆ ಬಾಳೆ ಬೆಳೆಗೆ ಹಾನಿಯಾಗಿದೆ. ಇದರಿಂದ ಎರಡು ಲಕ್ಷ ರೂಪಾಯಿ ನಷ್ಟವಾಗಿದೆ. ನಮ್ಮ ಗ್ರಾಮದಲ್ಲಿ ಮೆಕ್ಕೆ ಜೋಳಕ್ಕೆ ಹಾನಿಯಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು" ಎಂದು ಮನವಿ ಮಾಡಿದರು.
ಸಚಿವ ಶಿವರಾಜ್ ತಂಗಡಗಿ ಮಾತನಾಡಿ, "ಕಾರಟಗಿ ತಾಲೂಕಿನಲ್ಲಿ ಅತೀ ಹೆಚ್ಚು ಬೆಳೆ ನಾಶವಾಗಿದೆ. 12 ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದು ಬೆಳೆ ಹಾನಿಯಾಗಿದೆ. ಕಾರಟಗಿಯಲ್ಲಿ ಒಟ್ಟಾರೆ 4,895 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 12,722 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ" ಎಂದು ತಿಳಿಸಿದರು.
ಮಾಜಿ ಶಾಸಕ ಬಸವರಾಜ ದಡೇಸಗೂರ ಮಾತನಾಡಿ, "ಬಿಜೆಪಿ ಸರ್ಕಾರದ ಅವಧಿಯಲ್ಲಿ ಭತ್ತ ಹಾನಿಯಾದಾಗ 62 ಕೋಟಿ ರೂಪಾಯಿ ಪರಿಹಾರ ನೀಡಿತ್ತು. ಅಂದು ಯಾವುದೇ ಕ್ಯಾಬಿನೆಟ್ ನೆಪ ಹೇಳದೆ ಸರ್ಕಾರ ಹಣ ನೀಡಿತ್ತು. ಆದರೆ, ಇದೀಗ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುತ್ತಿದೆ. ಕೂಡಲೇ ಪರಿಹಾರ ನೀಡಬೇಕೆಂದು" ಆಗ್ರಹಿಸಿದರು.
ಇದನ್ನೂ ಓದಿ: ಅಕಾಲಿಕ ಧಾರಾಕಾರ ಆಲಿಕಲ್ಲು ಮಳೆಗೆ 10 ಸಾವಿರ ಹೆಕ್ಟೇರ್ ಪ್ರದೇಶ, 110 ಕೋಟಿ ಮೊತ್ತದ ಬೆಳೆ ಹಾನಿ
ಇದನ್ನೂ ಓದಿ: ಕೊಪ್ಪಳದಲ್ಲಿ ಬಿರುಗಾಳಿ ಸಹಿತ ಮಳೆ: ಸಿಡಿಲು ಬಡಿದು ಇಬ್ಬರು ಸಾವು