ETV Bharat / state

ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ಧಾರವಾಡ ಡಿಸಿ - Dharwad DC

author img

By ETV Bharat Karnataka Team

Published : May 16, 2024, 11:57 AM IST

Updated : May 16, 2024, 1:43 PM IST

ಧಾರವಾಡದ ಹಲವು ಬಡಾವಣೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಸ್ವಚ್ಛತೆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿಯಿಂದ ಪರಿಶೀಲನೆ
ಧಾರವಾಡ ಜಿಲ್ಲಾಧಿಕಾರಿಯಿಂದ ಪರಿಶೀಲನೆ (ETV Bharat)

ಜಿಲ್ಲಾಧಿಕಾರಿ ದಿವ್ಯಪ್ರಭು (ETV Bharat)

ಹುಬ್ಬಳ್ಳಿ(ಧಾರವಾಡ): ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

ಹುಬ್ಬಳ್ಳಿಯ ವಿವಿಧ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಮುಂದಿನ ವಾರದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಲಿದೆ. ಈಗಾಗಲೇ ಪೂರ್ವ ಮುಂಗಾರು ಮಳೆ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ನಗರ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾದರೆ ಸಮಸ್ಯೆಗಳು ಉಲ್ಬಣವಾಗುತ್ತವೆ. ಅವುಗಳನ್ನು ತುರ್ತಾಗಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಚರಂಡಿ, ಒಳ ಚರಂಡಿ, ರಾಜ ಕಾಲುವೆ ಸ್ವಚ್ಛತೆಗೆ ಆದ್ಯತೆ ನೀಡಿ: ನಗರ ಪ್ರದೇಶದಲ್ಲಿರುವ ಎಲ್ಲಾ ಚರಂಡಿ, ಒಳ ಚರಂಡಿ ಮತ್ತು ರಾಜ ಕಾಲುವೆ ಸ್ವಚ್ಛಗೊಳಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ರೀತಿಯಲ್ಲಿ ಹೂಳು ತುಂಬಿಕೊಳ್ಳದಂತೆ ಕ್ರಮ ವಹಿಸಬೇಕು. ಸಾರ್ವಜನಿಕರು ಕಸ, ತ್ಯಾಜ್ಯ ವಸ್ತುಗಳು, ಅನಗತ್ಯ ವಸ್ತುಗಳನ್ನು ರಾಜ ಕಾಲುವೆಗೆ ಎಸೆಯಬಾರದು. ಅದರ ಬದಲಿಗೆ ಪಾಲಿಕೆಯ ತ್ಯಾಜ್ಯ ಸಂಗ್ರಹ ವಾಹನಕ್ಕೆ ಹಾಕಬೇಕು. ಇದರಿಂದ ರಾಜ ಕಾಲುವೆಯಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ತಗ್ಗು ಪ್ರದೇಶಗಳಿಗೆ ನುಗ್ಗುವುದು ತಪ್ಪುತ್ತದೆ. ಕೆಲವೆಡೆಗಳಲ್ಲಿ ಮ್ಯಾನ್‌ಹೋಲ್‌ಗಳು ತೆರೆದುಕೊಂಡಿರುವುದು ಗಮನಕ್ಕೆ ಬಂದಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಮ್ಯಾನ್ ಹೋಲ್‌ಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ರಾಜ ಕಾಲುವೆ ಬಗ್ಗೆ ವಿಸ್ತೃತ ಯೋಜನಾ ವರದಿ ತಯಾರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು. ರಾಜ ಕಾಲುವೆ ಅತಿಕ್ರಮಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಜನಪ್ರತಿನಿಧಿಗಳು, ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದು. ಮಳೆಯಿಂದ ಯಾವುದೇ ಜೀವ ಹಾನಿ ಆಗಬಾರದು ಎಂಬುದು ನಮ್ಮ ಉದ್ಧೇಶ. ಈ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುವುದು. ತುರ್ತು ಸ್ಪಂದನಾ ತಂಡ ರಚಿಸಲಾಗುವುದು. ಈ ತಂಡ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಕಲಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಇದನ್ನೂ ಓದಿ: ಅಂತಿಮ ಹಂತ ತಲುಪಿದ ಕಾವೇರಿ 5ನೇ ಹಂತದ ಕಾಮಗಾರಿ, ನೀರು ಸರಬರಾಜಿಗೆ ಸಿದ್ಧತೆ - Cauvery 5th Stage

Last Updated : May 16, 2024, 1:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.