ETV Bharat / state

ನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮ್ಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ ಕೆ ಶಿವಕುಮಾರ್

author img

By ETV Bharat Karnataka Team

Published : Feb 19, 2024, 3:34 PM IST

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್

ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಡಿಸಿಎಂ ಡಿ‌ ಕೆ ಶಿವಕುಮಾರ್

ಬೆಂಗಳೂರು : ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ ಡಿ ಕುಮಾರಸ್ವಾಮಿ ಅವರು ಪಕ್ಷೇತರ ಶಾಸಕರ ಜೊತೆ ಮಾತಾಡಿದ್ದಾರೆ. ಕಾಲ್ ಮಾಡಿ, ಧಮ್ಕಿ ಹಾಕಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ‌ ಕೆ ಶಿವಕುಮಾರ್ ಆರೋಪಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನ್​ ಮಾತನಾಡುತ್ತಿದ್ದಾರೆ, ಯಾರಿಗೆ ಧಮ್ಕಿ ಹಾಕುತ್ತಿದ್ದಾರೆ ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ? ಎಂಬ ಬಗ್ಗೆ ಪ್ರತಿಕ್ರಿಯಿಸಿ, ಸುಮ್ಮನೆ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ. ಏನೇನು ನಡೀತಾ ಇದೆ ಅನ್ನೋದು ನಮಗೆ ಗೊತ್ತು. ನಮಗೆ ಯಾರ ಅಗತ್ಯವೂ ಇಲ್ಲ. ನಾವು 136 ಸೀಟು ಗೆದ್ದಿದ್ದೇವೆ. ಇಬ್ಬರು ಪಕ್ಷೇತರರು ನಮ್ಮ ಜೊತೆಗೆ ಇದ್ದಾರೆ. ಇದು ಅಲ್ಲದೇ ಇನ್ನೂ ಯಾರ್ಯಾರೋ‌ ಇದ್ದಾರೆ. ಎಲ್ಲವನ್ನೂ ತೋರಿಸಿ ಆಮೇಲೆ ಮಾತಾಡ್ತೀನಿ ಎಂದು ಸೂಚ್ಯವಾಗಿ ಡಿಕೆಶಿ ಹೇಳಿದ್ರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ? ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದರು.

ಸೋಮಶೇಖರ್ ಅವರ ಜತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ” ಎಂದು ಹೇಳಿದರು.

ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ಡಿಕೆಶಿ ತಿಳಿಸಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ: ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೇ ಇರುತ್ತದೆ. ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಾರೆ. ಬೇರೆಯವರ ಹೆಸರು ಸೇರಿಸುತ್ತಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಜಾತಿ ಕೆಡಿಸಿ, ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆಶಿ ಹೇಳಿದರು.

ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳನ್ನು ಹೊಂದಿರುವ ವ್ಯಕ್ತಿ. ಅವರು ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಏಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕನ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ ಎಂದರು.

ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ: “ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಏಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದು ಡಿಕೆಶಿ ಹೇಳಿದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು : ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ ಎಂದು ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದರು.

ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು ನಾವು: ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ "ಭಾರತ ಜನನಿಯ ತನುಜಾತೆ ", "ಸರ್ವಜನಾಂಗದ ಶಾಂತಿಯ ತೋಟ" ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.

ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ : ಮಗಳ ಮೂಲಕ ಸಮಸ್ಯೆ ಹೇಳಿಕೊಂಡ ತಾಯಿ: ಸ್ಥಳದಲ್ಲೇ ಪರಿಹಾರಕ್ಕೆ ಆದೇಶಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.