ETV Bharat / state

ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಪ್ರಚಾರ; ಡಾ. ಎಂ.ಸಿ. ಸುಧಾಕರ್ ಆರೋಪ - MC Sudhakar

author img

By ETV Bharat Karnataka Team

Published : Apr 29, 2024, 5:25 PM IST

ಡಾ.ಎಂ.ಸಿ.ಸುಧಾಕರ್ ಆರೋಪ
ಡಾ.ಎಂ.ಸಿ.ಸುಧಾಕರ್ ಆರೋಪ

ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಸಿ. ಸುಧಾಕರ್ ಆರೋಪಿಸಿದ್ದಾರೆ.

ಬೆಳಗಾವಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೊಳಿಸಲಿದೆ ಎಂದು ಬಿಜೆಪಿ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಆರೋಪಿಸಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಆಡಳಿತಾವಧಿಯಲ್ಲೇ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರ ಚರ್ಚೆಯಾಗಿದೆ. ಸ್ಯಾಮ್ ಪಿತ್ರೋಡಾ ಅವರು ಈ ವಿಷಯ ಪ್ರಸ್ತಾಪಿಸಿದ್ದು, ಅದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು, ಕಾಂಗ್ರೆಸ್‌ ಪಕ್ಷದ ನಿಲುವು ಅಲ್ಲ. ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

1994ರಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ಜಾರಿಗೆ ಬಂದಿದೆ. ಇನ್ನು ವಿಧಾನಸಭೆ ಚುನಾವಣೆಗೂ ಮುಂಚೆ ಬಸವರಾಜ ಬೊಮ್ಮಾಯಿ ಸರ್ಕಾರ ಶೇ.4ರಷ್ಟು ಮೀಸಲಾತಿ ವಾಪಸ್​ ಪಡೆದಿದ್ದರು. ಆ ಬಳಿಕ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಯಥಾಸ್ಥಿತಿ ಕಾಪಾಡುತ್ತೇವೆ ಎಂದು ಹೇಳಿದ್ದರು. ಆದ್ದರಿಂದ ಬಿಜೆಪಿಯವರು ಏನು ಹೇಳಲು ಹೊರಟಿದ್ದಾರೆ ಎಂದು ಸಚಿವರು ಪ್ರಶ್ನಿಸಿದರು.

ದೇಶದಲ್ಲಿ ನಡೆದ ಮೊದಲ ಮತ್ತು ಎರಡನೇ ಹಂತದ ಮತದಾನ ಪ್ರಕ್ರಿಯೆಗಳು ಬಿಜೆಪಿ ಪರವಾಗಿಲ್ಲ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣೆ ಪ್ರಚಾರ ಸಭೆಗಳಲ್ಲಿ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ನವರು ಮಂಗಳಸೂತ್ರ ಕಿತ್ತುಕೊಳ್ಳುತ್ತಾರೆ ಎನ್ನುವ ಮಾತುಗಳನ್ನು ಪ್ರಧಾನಿ ಮೋದಿಯವರಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ಮೇಲೆ ತೆರಿಗೆ ಹಾಕಲು ಕಾಂಗ್ರೆಸ್ ಚಿಂತನೆ ನಡೆಸಿದೆ: ಬಸವರಾಜ ಬೊಮ್ಮಾಯಿ - Lok Sabha Election 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.