ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಸೋಮವಾರ ಸುದೀರ್ಘ ಸಭೆ ನಡೆಸಿದರು. ಈ ವೇಳೆ ಹಾಲಿನ ದರವನ್ನು ಲೀಟರ್ಗೆ 5 ರೂ. ಏರಿಕೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಣಯಿಸಲಾಗಿದೆ. ದರ ಹೆಚ್ಚಳವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲು ಸಿಎಂ ನಿರ್ದೇಶನ ನೀಡಿದ್ದಾರೆ.
ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುದು ಸರ್ಕಾರದ ದೃಢ ನಿಲುವು ಎಂದು ಸಿಎಂ ಸ್ಪಷ್ಟಪಡಿಸಿದರು. ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆ ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದರು.

ಆಡಳಿತಾತ್ಮಕ ವೆಚ್ಚ ಇಳಿಕೆಗೆ ಸೂಚನೆ: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5%ಕ್ಕೆ ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವಾಗಿದೆ ಎಂದು ಹೇಳಿದರು.
ಒಕ್ಕೂಟಗಳು ಮನವಿಗೆ ಒಪ್ಪದ ಸಿಎಂ: ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳು ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ.
ಕೆಲ ದಿನಗಳ ಹಿಂದೆ ರಾಜ್ಯದ ರೈತರು ಕೆಎಂಎಫ್ ಮುಂದೆ ಹಾಲಿನ ದರ ಏರಿಸುವಂತೆ ಪ್ರತಿಭಟನೆ ನಡೆಸಿದ್ದರು. ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರ ಏರಿಸುವಂತೆ ಕೆಎಂಎಫ್ಗೆ ಒತ್ತಡ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ರಾಜ್ಯದಲ್ಲಿ ಹಾಲಿನ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರ ಮನವಿ ಮಾಡಿತ್ತು.
ಕೆಎಂಎಫ್ ಕೇಂದ್ರ ಕಚೇರಿ ಎದುರು ಪ್ರತಿಭಟನೆ: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ 10 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಕೆಎಂಎಫ್ ಹಾಗೂ ಅದರ ಸದಸ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಿಸುವಂತೆ ಹಲವು ತಿಂಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿವೆ. ಮತ್ತೊಂದೆಡೆ, ರೈತರು ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ಮಾಡಿ ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿದ್ದರು.
ಹೈನುಗಾರಿಕೆಯ ಖರ್ಚು, ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಲಿನ ದರ ಹೆಚ್ಚಿಸದಿದ್ದರೆ ಜಿಲ್ಲಾ ಹಾಲು ಒಕ್ಕೂಟಗಳು ನಷ್ಟ ಅನುಭವಿಸಬೇಕಾಗುತ್ತದೆ. ಮತ್ತೊಂದೆಡೆ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಇತರ ಬ್ರ್ಯಾಂಡ್ಗಳ ಹಾಲಿನ ದರಕ್ಕೆ ಹೋಲಿಸಿದರೆ, ರಾಜ್ಯದ ನಂದಿನಿ ಹಾಲಿನ ಬೆಲೆ ತುಂಬಾ ಕಡಿಮೆಯಿದೆ ಎಂದು ಪ್ರಸ್ತಾವದಲ್ಲಿ ಉಲ್ಲೇಖಿಸಲಾಗಿತ್ತು.
ಕಳೆದ ವರ್ಷ ಜೂನ್ನಲ್ಲಿ ಕೆಎಂಎಫ್, ಪ್ರತಿ ಲೀಟರ್ಗೆ 2 ರೂಪಾಯಿ ಹಾಲಿನ ದರ ಏರಿಕೆ ಮಾಡಿತ್ತು. ಜೂನ್ 2024ರಿಂದ ದರ ಪರಿಷ್ಕರಣೆ ಜಾರಿಯಾಗಿತ್ತು. 50 ಎಂಎಲ್ ಹೆಚ್ಚುವರಿ ಹಾಲಿನ ಪ್ರಮಾಣ ಹೆಚ್ಚಿಸಿ 2 ರೂ. ದರ ಹೆಚ್ಚಳ ಮಾಡಲಾಗಿತ್ತು. 2023ರ ಆಗಸ್ಟ್ನಲ್ಲಿ ಹಾಲಿನ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲಾಗಿತ್ತು. ಆಗ ದರ ಪರಿಷ್ಕರಣೆಯೊಂದಿಗೆ ಹಾಲಿನ ದರವು ಲೀಟರ್ಗೆ 39 ರೂ.ಗಳಿಂದ 42 ರೂ.ಗೆ ಏರಿಕೆಯಾಗಿತ್ತು.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪ್ರತಿಕ್ರಿಯೆ: ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ''ಹಾಲಿನ ದರ ಹೆಚ್ಚು ಮಾಡಬೇಕು ಅನ್ನೋದು ಸಭೆಯಲ್ಲಿ ತೀರ್ಮಾನವಾಗಿದೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಆಗಲಿದೆ'' ಎಂದು ತಿಳಿಸಿದ್ದಾರೆ.
''ಹಾಲು ಒಕ್ಕೂಟದವರು ಮತ್ತು ರೈತರಿಗೆ ಏನು ಬೇಡಿಕೆ ಇಟ್ಟಿದ್ದಾರೆ. ಎಲ್ಲವನ್ನೂ ಸಿಎಂ ಮುಂದೆ ಇಟ್ಟಿದ್ದೇವೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲೇನು ತೀರ್ಮಾನ ಆಗಿದೆ ಅಂತ ಸಹಕಾರ ಸಚಿವರು, ಪಶು ಸಂಗೋಪನೆ ಸಚಿವರು ಹೇಳಬಹುದು'' ಎಂದರು.
''ಗ್ರಾಹಕರು ಮತ್ತು ರೈತರು ನಮಗೆ ಎರಡು ಕಣ್ಣು ಇದ್ದ ಹಾಗೆ. ಬೇರೆ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಹಾಲಿಗೆ ಕಡಿಮೆ ಬೆಲೆ ಇದ್ದು, ಲೀಟರ್ಗೆ 42 ರೂ.ಗಳಿದೆ. ಆದರೆ ಬೇರೆ ರಾಜ್ಯಗಳಲ್ಲಿ ಹೆಚ್ಚಿದೆ. ಒಂದು ಲೀಟರ್ ಬೆಲೆ ರಾಜ್ಯದಲ್ಲಿ ಹೆಚ್ಚಿಗೆ ಇಲ್ಲ ಎಂದು ನಮ್ಮ ರೈತರು ಬಂದು ಗಲಾಟೆ ಮಾಡುತ್ತಾರೆ. ಹಸು ಸಾಗಾಣಿಕೆ ಸಂಖ್ಯೆ ಕೂಡ ಕಡಿಮೆಯಾಗಿದೆ. ಹಸುಗಳಿಗೆ ಹಾಕೋ ಆಹಾರದ ಬೆಲೆ ಹೆಚ್ಚಾಗಿದೆ. ಮೇವು, ಆಹಾರದ ಬೆಲೆ ಏರಿಕೆಯಾಗಿದೆ. ರಾಜ್ಯದ 16 ಹಾಲಿನ ಒಕ್ಕೂಟಗಳಲ್ಲಿ 3 ಒಕ್ಕೂಟ ನಷ್ಟದಲ್ಲಿದೆ'' ಎಂದರು.
''ಇವತ್ತು ಸಿಎಂ ಅವರು ಸಭೆ ಕರೆದಿದ್ದರು. ಎಲ್ಲರೂ ಸೇರಿ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾಪ ಇಟ್ಟಿದ್ದೆವು. ಸಿಎಂ ಅವರೇ ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ನೇರವಾಗಿ ರೈತರಿಗೆ ಹಣ ಹೋಗುತ್ತೆ ಅಂತ ಸಿಎಂ ಹೇಳಿದ್ದಾರೆ. ನೂರಕ್ಕೆ ನೂರು ಹೆಚ್ಚಳದ ದರ ರೈತರಿಗೆ ಹೋಗುತ್ತದೆ. ಗ್ರಾಹರಿಗೆ ಬರೆ ಎಳೆಯುವ ಕೆಲಸ ಮಾಡಲ್ಲ. ಸಾಧಕ ಬಾಧಕದ ಬಗ್ಗೆ ಚರ್ಚೆ ಆಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬಸ್ನಲ್ಲಿ ಮೊಬೈಲ್ ಕಳ್ಳತನ ತಡೆದ ಮಹಿಳಾ ಕಂಡಕ್ಟರ್: ಅಂತಾರಾಷ್ಟ್ರೀಯ ಕಬಡ್ಡಿ ಸಾಧಕರಿಗೆ BMTC ಗೌರವ