ಮಂಗಳೂರು: "ನಿವೃತ್ತ ಡಿಐ-ಐಜಿಪಿ ಓಂಪ್ರಕಾಶ್ ಹತ್ಯೆ ಪ್ರಕರಣದ ಹಿಂದೆ ಪಿಎಫ್ಐ ಕೈವಾಡವಿರುವ ಬಗ್ಗೆ ತನಿಖೆಯಾಗಲಿ" ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆಗ್ರಹಿಸಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಮೃತರ ಪತ್ನಿ ಪಲ್ಲವಿಯವರು ಓಂಪ್ರಕಾಶ್ ಅವರಿಗೆ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಪಿಎಫ್ಐ ಜೊತೆ ನಂಟು ಇದ್ದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವಾಗ ಎಲ್ಲ ರೀತಿಯ ಕ್ರಿಮಿನಲ್ಗಳ ಪರಿಚಯವಾಗಿರುತ್ತದೆ. ನಿವೃತ್ತರಾದ ಬಳಿಕ ಅವರಿಗೆ ಯಾವ ರೀತಿಯ ಸಂಪರ್ಕವಿತ್ತು ಎಂಬುದು ತಿಳಿಯಬೇಕಿದೆ. ಪೊಲೀಸ್ ಇಲಾಖೆಯಲ್ಲಿ ನಿಷೇಧಿತ ಪಿಎಫ್ಐ ಸದಸ್ಯರನ್ನು ನೇಮಕ ಮಾಡಲಾಗಿದೆಯೇ ಎಂಬ ಪರಿಶೀಲನೆ ನಡೆಯಬೇಕು. ಓಂಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ವಿಧಾನಸಭೆ ಸ್ಪೀಕರ್ ಅವರನ್ನು ವಿಚಾರಣೆಗೊಳಪಡಿಸಬೇಕು" ಎಂದು ಒತ್ತಾಯಿಸಿದರು.
"ಮೃತರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯವರ ಮಾನಸಿಕ ಆರೋಗ್ಯದ ಬಗ್ಗೆ ವಿಧವಿಧವಾಗಿ ಚರ್ಚೆಯಾಗುತ್ತಿದೆ. ಪೊಲೀಸರು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಅಣತಿಯಂತೆ ತನಿಖೆ ಮಾಡುತ್ತಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ. ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಹಾಗೂ ಪಿಎಸ್ಐಗಳು ನನಗೆ ಕರೆ ಮಾಡಿ ಅಳುತ್ತಿದ್ದಾರೆ. ಇಷ್ಟು ದಿನ ಇಲಾಖೆಯಲ್ಲಿ ಮೇಲಾಧಿಕಾರಿಗಳ ಕಾಟವಿದ್ದರೂ ಮನೆಗೆ ಹೋಗಿ ನೆಮ್ಮದಿಯಿಂದ ಮಲಗಬಹುದಿತ್ತು. ಆದರೆ ಡಿಜಿಯವರ ಹತ್ಯೆಯಾದ ಬಳಿಕ ಮನೆಗೆ ಹೋಗಿ ಮಲಗಲೂ ಸಹ ಭಯವಾಗುತ್ತಿದೆ" ಎಂದು ಹೇಳುತ್ತಿದ್ದಾರೆ ಎಂದರು.
ಎನ್ಐಎ ತನಿಖೆ ಅಗತ್ಯ: "2016ರ ಬಳ್ಳಾರಿಯಲ್ಲಿನ ಕೊಲೆ ಹಾಗೂ ತನ್ನ ವರ್ಗಾವಣೆ ವಿಚಾರದ ಬಗ್ಗೆ ಮಾತನಾಡಿ, ಅಂದಿನ ಕೃತ್ಯಗಳೊಂದಿಗೆ ಪಿಎಫ್ಐ ಹಾಗೂ ಸರ್ಕಾರಕ್ಕೆ ನಂಟು ಇದೆ. ಅಂದಿನ ಘಟನಾವಳಿಗಳ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಲಾಗಿದೆ. ಸರ್ಕಾರ ಈ ಪ್ರಕರಣವನ್ನು ಹಳ್ಳ ಹಿಡಿಸಿ ಅವರ ಪುತ್ರಿ, ಪತ್ನಿ ಮೇಲೆ ಕಟ್ಟುತ್ತದೆ. ಆದ್ದರಿಂದ ಎನ್ಐಎ ತನಿಖೆ ಅಗತ್ಯ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಇಂದಿನ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರಿಗೆ ಕಳಿಸಿದ್ದೇನೆ" ಎಂದು ಹೇಳಿದರು.
ಇದನ್ನೂ ಓದಿ: ನಿವೃತ್ತ ಡಿಜಿಪಿ ಹತ್ಯೆ ಪ್ರಕರಣ: ಪತ್ನಿ ಬಂಧನ, ಕೊಲೆ ಪ್ರಕರಣ ಸಿಸಿಬಿ ಹೆಗಲಿಗೆ
ಇದನ್ನೂ ಓದಿ: ಓಂ ಪ್ರಕಾಶ್ ಕೊಲೆ ಪ್ರಕರಣ: ತಾಯಿ, ತಂಗಿ ಮೇಲೆ ಶಂಕೆ ವ್ಯಕ್ತಪಡಿಸಿದ ಪುತ್ರ; ಎಫ್ಐಆರ್ ದಾಖಲು