ETV Bharat / state

ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸ್ವಯಂ ಪ್ರೇರಿತ ಅರ್ಜಿ ದಾಖಲು: ಹೈಕೋರ್ಟ್ ಎಚ್ಚರಿಕೆ

author img

By ETV Bharat Karnataka Team

Published : Jan 30, 2024, 4:57 PM IST

ಸಾರ್ವಜನಿಕರಿಗೆ ಸಹಕಾರಿಯಾಗುವುದಕ್ಕಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ, ತೆರವುಗೊಳಿಸುವ ಸಂಬಂಧ ಆದೇಶಿಸುವುದಾಗಿ ಹೈಕೋರ್ಟ್ ತಿಳಿಸಿದೆ.

high court warns bbmp
high court warns bbmp

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸದ ಬಿಬಿಎಂಪಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೊರ್ಟ್, ಈ ಸಂಬಂಧ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ತೆರವು ಕಾರ್ಯ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ತ್ಯಾಗರಾಜನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಈ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುತ್ತಿದೆ. ಸರಿಯಾದ ರಸ್ತೆ, ಪಾದಚಾರಿ ಮಾರ್ಗಗಳಿಗಾಗಿ ತೆರಿಗೆ ಪಾವತಿಸಲಾಗುತ್ತಿದೆ. ಆದರೆ, ಪಾಲಿಕೆ ಪಾದಚಾರಿ ಮಾರ್ಗಗಳ ಸುಧಾರಣೆಗೆ ಎಂದಿಗೂ ಮುಂದಾಗುತ್ತಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಅಲ್ಲದೆ, ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಸಂಬಂಧ ಆದೇಶವನ್ನು ನೀಡಲಾಗುವುದು. ಈ ಪ್ರಕ್ರಿಯೆ ಯಾರ ವಿರುದ್ಧವೂ ಅಲ್ಲ. ಸಾರ್ವಜನಿಕರಿಗೆ ಸಹಕಾರಿಯಾಗುವುದಕ್ಕಾಗಿ ಮಾತ್ರ ಎಂದು ಪೀಠ ಇದೇ ವೇಳೆ ಸ್ಪಷ್ಟಪಡಿಸಿತು.

ಕೆಲವು ಪಾದಚಾರಿ ಮಾರ್ಗಗಳಲ್ಲಿ ವಾಹನಗಳ ನಿಲುಗಡೆ ಮಾಡಲಾಗುತ್ತಿದೆ. ತಕ್ಷಣ ಎಲ್ಲ ಪಾದಚಾರಿ ಮಾರ್ಗಗಳನ್ನು ತೆರವು ಮಾಡಬೇಕು. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಫೆಬ್ರುವರಿ 1 ಕ್ಕೆ ಮುಂದೂಡಿತು. ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿಯೊಂದಿಗೆ ಇತರೆ ಯಾವ ಇಲಾಖೆಗಳು ಭಾಗಿಯಾಗಬಹುದು. ಅವರಿಗೆ ಯಾವ ರೀತಿಯಲ್ಲಿ ನಿರ್ದೇಶನ ನೀಡಬಹುದು ಎಂಬುದರ ಕುರಿತು ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಕೋರ್ಟ್ ಸೂಚನೆ ನೀಡಿತು.

ಇದನ್ನೂ ಓದಿ: ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನ ಪ್ರಯಾಣಿಸಿ ಅಪಘಾತಕ್ಕೀಡಾದರೆ ಸವಾರನ ನಿರ್ಲಕ್ಷ್ಯವೂ ಕಾರಣ: ಹೈಕೋರ್ಟ್

ಪ್ರಕರಣ ಸಂಬಂಧ ವಿವರಣೆ ನೀಡುವುದಕ್ಕಾಗಿ ಮುಂದಿನ ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತರು ಖುದ್ದು ಹಾಜರಿರಬೇಕು ಎಂದು ನಿರ್ದೇಶನ ನೀಡಿತ್ತು. ಆದರೆ, ಇದೇ ವಿಚಾರ ಸಂಬಂಧ ಅಡ್ವೋಕೇಟ್ ಜನರಲ್ ಹಾಜರಾಗಿ ವಿವರಣೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತರು ಖುದ್ದು ಹಾಜರಿರಬೇಕು ಎಂಬ ನಿರ್ದೇಶವನ್ನು ಮಾರ್ಪಾಡು ಮಾಡಿತು.

ಪ್ರಕರಣದ ಹಿನ್ನೆಲೆ ಏನು? ಪಾದಚಾರಿ ಮಾರ್ಗದಲ್ಲಿದ್ದ ಬಿಡಾಡಿ ದನಗಳ ದಾಳಿಯಿಂದ ಅರ್ಜಿದಾರರ ತಾಯಿಗೆ ಪೆಟ್ಟಾಗಿದೆ. ಪಾದಚಾರಿ ಮಾರ್ಗವನ್ನು ಒತ್ತುವರಿದಾರರಿಂದ ತೆರವುಗೊಳಿಸಿದ ಬಳಿಕ ಅದಕ್ಕೆ ಕಬ್ಬಿಣದ ತಡೆಗೋಡೆ(ಗ್ರಿಲ್)ಯನ್ನು ಹಾಕಿ ಸಂರಕ್ಷಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು. ಅಲ್ಲದೆ, ಅರ್ಜಿದಾರರ ಮನೆ ಬಳಿಯ ಪಾದಚಾರಿ ಮಾರ್ಗಗಳ ಒತ್ತುವರಿ ಸಂಬಂಧಿಸಿದ ಛಾಯಾಚಿತ್ರಗಳೊಂದಿಗೆ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ವಾಹನ ನಿಲುಗಡೆಗೆ ಇರುವ ಸ್ಥಳದಲ್ಲಿ ವಾಣಿಜ್ಯ ವ್ಯವಹಾರಕ್ಕಾಗಿ ಅಧಿಕಾರಿಗಳು ಅನುಮತಿ ನೀಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು.

ಅಲ್ಲದೆ, ಪಾದಚಾರಿ ಒತ್ತುವರಿ ಮಾಡಿಕೊಂಡಿರುವ ಭಾಗಗಳನ್ನು ವೀಕ್ಷಣೆ ಮಾಡುವುದಕ್ಕಾಗಿ ಕೋರ್ಟ್ ಕಮಿಷನರ್ ನೇಮಕ ಮಾಡಬೇಕು. ತಾಯಿಗೆ ಆದ ಅಪಘಾತಕ್ಕೆ ಪರಿಹಾರವಾಗಿ 15 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ: ಶೂಟರ್‌ 4 ಶಸ್ತ್ರಾಸ್ತ್ರ, 25 ಸಾವಿರ ಗುಂಡುಗಳನ್ನು ಹೊಂದುವ ಮನವಿ ಪರಿಗಣಿಸಲು ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.