ETV Bharat / state

ಕೆಪಿಟಿಸಿಎಲ್​ ಸಹಾಯಕ ಎಂಜಿನಿಯರ್ಸ್​​ ನೇಮಕಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

author img

By ETV Bharat Karnataka Team

Published : Feb 7, 2024, 9:13 PM IST

ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್​​ಗಳ ನೇಮಕಕ್ಕೆ ಹೈಕೋರ್ಟ್​​ನಿಂದ ತಾತ್ಕಾಲಿಕವಾಗಿ ಷರತ್ತುಬದ್ಧ ಅನುಮತಿ ಸಿಕ್ಕಿದೆ.

high-court-conditional-permission-to-appoint-kptcl-assistant-engineers
ಕೆಪಿಟಿಸಿಎಲ್​ ಸಹಾಯಕ ಎಂಜಿನಿಯರ್ಸ್​​ ನೇಮಕಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್​​ಗಳ ನೇಮಕಕ್ಕೆ ಹೈಕೋರ್ಟ್ ತಾತ್ಕಾಲಿಕವಾಗಿ ಷರತ್ತುಬದ್ಧ ಅನುಮತಿ ನೀಡಿದೆ.

ನೇಮಕಾತಿ ಸಂಬಂಧ ಕೆಪಿಟಿಸಿಎಲ್ 2023ರ ಫೆಬ್ರವರಿ 4ರಂದು ಪ್ರಕಟಿಸಿದ್ದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ರದ್ದುಪಡಿಸಿ ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶ ಪ್ರಶ್ನಿಸಿ, ಆ ಪಟ್ಟಿಯಲ್ಲಿ ಅರ್ಹತೆ ಪಡೆದುಕೊಂಡಿದ್ದ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲೂಕಿನ ಜಿ.ಶೃತಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ, ನೇಮಕಾತಿ ಪ್ರಕ್ರಿಯೆ ನಡೆಸಲು ಷರತ್ತಿನ ಅನುಮತಿ ನೀಡಿದೆ. ಅಲ್ಲದೆ, ಪರೀಕ್ಷೆಯ ಫಲಿತಾಂಶವು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ನ್ಯಾಯಪೀಠ ತಿಳಿಸಿದೆ.

ಅಲ್ಲದೆ, 2023ರ ಜ.3ರಂದು ಪ್ರಕಟಿಸಿದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯಂತೆ 404 (313 ಮೂಲ ವೃಂದ, 91 ಕಲ್ಯಾಾಣ ಕರ್ನಾಟಕ ವೃಂದ) ಆಭ್ಯರ್ಥಿಗಳಿಗೆ ತಾತ್ಕಾಲಿಕ ನೇಮಕಾತಿ ಆದೇಶಗಳನ್ನು ನೀಡುವಂತೆ ಕೆಪಿಟಿಸಿಎಲ್‌ಗೆ ನಿರ್ದೇಶನ ನೀಡಿದೆ. ಈ ತಾತ್ಕಾಲಿಕ ನೇಮಕಾತಿಗಳು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡುತ್ತವೆ ಎಂದು ನೇಮಕಾತಿ ಆದೇಶಗಳಲ್ಲಿ ನಮೂದಿಸಬೇಕು. ಒಂದೊಮ್ಮೆ ಮೇಲ್ಮನವಿ ಪುರಸ್ಕೃತಗೊಂಡು ಮೇಲ್ಮನವಿದಾರರು ಆಯ್ಕೆಗೊಂಡರೆ ಸೇವಾ ಹಿರಿತನ ಮತ್ತು ರೋಸ್ಟರ್ ಪಾಲಿಸಬೇಕು ಎಂದು ಹೇಳಿರುವ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕೆಪಿಟಿಸಿಎಲ್‌ನಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022ರ ಆ.24ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಆ.25ಕ್ಕೆ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಆಕ್ಷೇಪಣೆ ಸಲ್ಲಿಸಲು ಸೆ.2ರವರೆಗೆ ಅವಕಾಶ ನೀಡಲಾಗಿತ್ತು. ಕೀ ಉತ್ತರ ಪಟ್ಟಿಯಲ್ಲಿ ಕೆಲವು ಉತ್ತರಗಳು ತಪ್ಪಾಗಿವೆ ಎಂದು ಹಲವು ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದ್ದರು.

ಇದಕ್ಕೆ ಪರೀಕ್ಷಾ ಪ್ರಾಧಿಕಾರ ತಜ್ಞರ ಸಮಿತಿ ರಚಿಸಿ ಅದರ ಪರಿಶೀಲನೆ ಬಳಿಕ ನ.22ರಂದು ಅಂತಿಮ ಕೀ ಉತ್ತರಗಳ ಪ್ರಕಟಿಸಿತು. ಡಿ.27ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಯಿತು. ಅದರ ಆಧಾರದಲ್ಲಿ 2023ರ ಜ.3ರಂದು ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಯಿತು. ಅದರಲ್ಲಿ 501 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು, 404 ಅಭ್ಯರ್ಥಿಗಳ ತಾತ್ಕಲಿಕ ಪಟ್ಟಿ ಪ್ರಕಟಿಸಲಾಗಿತ್ತು.

ಈ ನಡುವೆ ಪರಿಷ್ಕೃತ ಕೀ ಉತ್ತರ ಪಟ್ಟಿಗೆ 900ಕ್ಕೂ ಹೆಚ್ಚು ಆಕ್ಷೇಪಣೆಗಳು ವ್ಯಕ್ತವಾದವು. ಆದಕ್ಕೆ ಪುನಃ ತಜ್ಞರ ಸಮಿತಿಯ ಪರಿಶೀಲನೆಗೆ ಒಳಪಡಿಸಲಾಯಿತು. ಹೆಚ್ಚುವರಿ ಅಂಕಗಳನ್ನು ನೀಡಿ 2023ರ ಫೆ.4ರಂದು ಪರಿಷ್ಕೃತ ಪಟ್ಟಿ ಪ್ರಕಟಿಸಲಾಯಿತು. ಇದರ ಪರಿಣಾಮ 135 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡು ಒಟ್ಟು ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಸಂಖ್ಯೆ 636 ಆಯಿತು.

ಎರಡನೇ ಬಾರಿ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿದ್ದನ್ನು ಆಕ್ಷೇಪಿಸಿ ಮೊದಲ ಪಟ್ಟಿಯಲ್ಲಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಎರಡನೇ ಪರಿಷ್ಕರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು. ಇದರಿಂದ ಅರ್ಹತಾ ಪಟ್ಟಿಯಿಂದ ವಂಚಿತರಾದ 135 ಅಭ್ಯರ್ಥಿಗಳ ಪೈಕಿ 50ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಸಿಜೆ ಆಗಿ ಎನ್.ವಿ.ಅಂಜಾರಿಯಾ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.