ಬೆಂಗಳೂರು: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವುದಕ್ಕೆ ಕೋರಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಐಜಿ ಡಿ.ರೂಪಾ ಮೌದ್ಗಿಲ್ ಅವರಿಗೆ ಸೂಚನೆ ನೀಡಿರುವ ಹೈಕೋರ್ಟ್, ಈ ಅರ್ಜಿಗೆ ಸಂಬಂಧಿಸಿದಂತೆ ಎರಡು ತಿಂಗಳಲ್ಲಿ ಕಾನೂನಿನನ್ವಯ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನಹಾನಿ ಪ್ರಕರಣ ಖಾಸಗಿ ದಾವೆಯಾಗಿದ್ದು, ಅದನ್ನು ಗಣನೆಗೆ ತೆಗೆದುಕೊಳ್ಳದೇ ನ್ಯಾಯಯುತವಾಗಿ ತನಗೆ ದೊರೆಯಬೇಕಾದ ಬಡ್ತಿ ನೀಡಲು ರಾಜ್ಯ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ)ನಿರ್ದೇಶನ ಕೋರಿ ರೂಪಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.
ಅಲ್ಲದೇ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಈ ಅರ್ಜಿಗೆ ಸಂಬಂಧ ಮಧ್ಯಂತರ ಅರ್ಜಿ ಸಲ್ಲಿಸಿರುವುದು ಸೂಕ್ತವಾಗಿಲ್ಲ. ಅವರು ಅಗತ್ಯ ಪಕ್ಷಕಾರರಾಗಿಲ್ಲ. ಇನ್ನು, ರೂಪಾ ಅವರು ಹೊಸದಾಗಿ ಡಿಒಪಿಟಿಗೆ ಮನವಿ ಸಲ್ಲಿಸಬೇಕು. ಮನವಿಯ ಸಂಬಂಧ ಸಕ್ಷಮ ಪ್ರಾಧಿಕಾರವು ಎಂಟು ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಪೀಠ ತಿಳಿಸಿದೆ.
ವಿಚಾರಣೆ ವೇಳೆ ರೋಹಿಣಿ ಸಿಂಧೂರಿ ಪರ ವಕೀಲರು, ರೂಪಾ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರೋಹಿಣಿ ಅವರು ದೂರು ದಾರೆಯಾಗಿದ್ದಾರೆ. ಹೀಗಾಗಿ, ಪ್ರಕಣದಲ್ಲಿ ಮಧ್ಯ ಪ್ರವೇಶಿಕೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬಡ್ತಿ ವಿಚಾರವು ಡಿಒಪಿಟಿ ನಿಯಮದ ಪ್ರಕಾರ ಇದು ಮುಚ್ಚಿದ ಲಕೋಟೆಯ ಪ್ರಕ್ರಿಯೆಯಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ರೂಪಾ ಪರ ವಕೀಲರು, ರೋಹಿಣಿ ದೂರು ದಾಖಲಿಸಿದ್ದು, ತನಿಖೆ ನಡೆದು ಅದನ್ನು ಕೈಬಿಡಲಾಗಿದೆ. ತನಿಖೆ ಕೈಬಿಟ್ಟ ಮೇಲೂ ಬಡ್ತಿ ನೀಡುತ್ತಿಲ್ಲ. ಅಡ್ವೊಕೇಟ್ ಜನರಲ್ ಮತ್ತು ಕಾನೂನು ಇಲಾಖೆಯು ತಮ್ಮ ಮತ್ತು ರೋಹಿಣಿ ನಡುವಿನ ದಾವೆಗಳು ಖಾಸಗಿ ಪ್ರಕರಣ ಎಂದು ಹೇಳಿದೆ. ಇದು ಸೇವಾ ಷರತ್ತು ಮತ್ತು ನಿಯಮಗಳಿಗೆ ಅನ್ವಯಿಸುವುದಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ರೋಹಿಣಿ ಅಗತ್ಯ ಪಕ್ಷಗಾರರಲ್ಲ: ಈ ವೇಳೆ ಪೀಠ, ರೋಹಿಣಿ ಅವರು ಇದರಲ್ಲಿ ಅಗತ್ಯ ಪಕ್ಷಕಾರರಾಗಲ್ಲ. ಇದು ಡಿಒಪಿಟಿ ಮತ್ತು ರೂಪಾ ಅವರಿಗೆ ಸಂಬಂಧಿಸಿದ ವಿಚಾರ. ಇದರಲ್ಲಿ ರೋಹಿಣಿ ಅವರು ಆತಂಕಗೊಳ್ಳುವುದು ಏನಿದೆ? ನೀವು ಕೇಡರ್ ಅಲ್ಲವೇ ಇಲ್ಲ. ಬೇರೆ ಕಾರಣಕ್ಕೆ ಅರ್ಜಿ ಸಲ್ಲಿಸಬಾರದು ಎಂದು ಮೌಖಿಕವಗಿ ಹೇಳಿ ಅರ್ಜಿ ಇತ್ಯರ್ಥಪಡಿಸಿತು.
ಏನಿದು ಪ್ರಕರಣ? : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವು ಖಾಸಗಿ ದಾವೆಯಾಗಿದ್ದು, ಅದನ್ನು ಗಣನೆಗೆ ತೆಗೆದುಕೊಳ್ಳದೇ ನ್ಯಾಯಯುತವಾಗಿ ತನಗೆ ದೊರೆಯಬೇಕಾದ ಬಡ್ತಿ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ರೂಪಾ ಅವರು ರೋಹಿಣಿ ವಿರುದ್ದ ಫೇಸ್ಬುಕ್ ಪೋಸ್ಟ್ ಹಾಕಿರುವುದಕ್ಕೆ ಆಕ್ಷೇಪಿಸಿ ರೋಹಿಣಿ ರೂಪಾ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ಹೂಡಿದ್ದಾರೆ. ಇದಕ್ಕೆ ವಿರುದ್ಧವಾಗಿ ರೂಪಾ ಅವರು ಮಾನಹಾನಿ ದಾವೆ ಹೂಡಿದ್ದಾರೆ. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಉಭಯ ಅಧಿಕಾರಿಗಳು ಸಂಧಾನಕ್ಕೆ ಒಪ್ಪದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.