ETV Bharat / state

ಅಪರಾಧ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿಗೆ ಹೈಕೋರ್ಟ್ ಅಸಮಾಧಾನ - High Court

author img

By ETV Bharat Karnataka Team

Published : May 7, 2024, 8:10 AM IST

Updated : May 7, 2024, 12:38 PM IST

High Court
ಹೈಕೋರ್ಟ್ (ETV Bharat)

ಅಪರಾಧ ಪ್ರಕರಣಗಳಲ್ಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಯಾವುದೇ ತನಿಖಾಧಿಕಾರಿಯು ಮರಣೋತ್ತರ ಪರೀಕ್ಷೆ (ಪೋಸ್ಟ್ ಮಾರ್ಟಮ್) ನಡೆಯುವ ಸ್ಥಳಕ್ಕೆ ಖುದ್ದು ಭೇಟಿ ನೀಡುವುದಿಲ್ಲ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಗಳಿಗೂ ಘಟನಾ ಸ್ಥಳದ ಪಂಚನಾಮೆ/ಮಹಜರು ವರದಿ ಬಗ್ಗೆ ಸರಿಯಾಗಿ ನಾಲ್ಕು ವಾಕ್ಯ ಬರೆಯಲು ಬರುವುದಿಲ್ಲ. ಕಾನೂನುಗಳ ಬಗ್ಗೆ ಆಳವಾದ ಮಾಹಿತಿ ಇರದ ಪೊಲೀಸ್ ಮುಖ್ಯ ಕಾನ್‌ಸ್ಟೇಬಲ್​​ ತನಿಖೆ ನಡೆಸಿ ವರದಿ ಸಿದ್ಧಪಡಿಸಿದರೆ, ಅದಕ್ಕೆ ವೃತ್ತ ನಿರೀಕ್ಷಕರು, ಸಬ್ ಇನ್ಸ್‌ಪೆಕ್ಟರ್ ಸಹಿ ಹಾಕಿ ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ಇದು ಪ್ರಸ್ತುತ ಪೊಲೀಸ್ ತನಿಖೆಗಳಲ್ಲಿ ನಡೆಯುತ್ತಿದೆ ಎಂದು ಹೈಕೋರ್ಟ್ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿತು.

ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ, ಪೊಲೀಸ್ ತನಿಖಾ ವರದಿಯ ಲೋಪಗಳ ಬಗ್ಗೆ ನ್ಯಾಯಮೂರ್ತಿ ವಿ. ಶ್ರಿಷಾನಂದ ಈ ಮೇಲಿನಂತೆ ಪ್ರತಿಕ್ರಿಯಿಸಿದರು. ಸರ್ಕಾರಿ ವಕೀಲರು, ನ್ಯಾಯಾಧೀಶರು ಹಾಗೂ ಕಾನೂನು ತಜ್ಞರು ನಿಯಮಿತವಾಗಿ ಕಾರ್ಯಕ್ರಮಗಳನ್ನು ನಡೆಸಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ನ್ಯಾಯಾಲಯಗಳ ತೀರ್ಪುಗಳ ಬಗ್ಗೆ ಮಾಹಿತಿ ನೀಡಬೇಕು. ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ತಿಳಿಸಿಕೊಡುವುದು ಸೂಕ್ತ ಎಂದು ಪೀಠ ಸಲಹೆ ನೀಡಿದೆ. ಅಲ್ಲದೇ, ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ. ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

ಪ್ರತಿದಿನ ವಿಐಪಿಯೊಬ್ಬರು ನಗರಕ್ಕೆ ಬರುತ್ತಾರೆ. ಅವರ ಸುಗಮ ಸಂಚಾರ ವ್ಯವಸ್ಥೆ ಹಾಗೂ ಬಂದೋಬಸ್ತ್‌ಗೆ ಎಲ್ಲಾ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಬೆಳಗ್ಗೆದ್ದರೆ ಪೊಲೀಸರು ಬಂದೋಬಸ್ತ್ ಕೆಲಸದಲ್ಲಿ ಇರುತ್ತಾರೆ. ಇನ್ಯಾವಾಗ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಪ್ರಶ್ನಿಸುವ ಮೂಲಕ ಸದ್ಯದ ಪರಿಸ್ಥಿತಿಯನ್ನು ಟೀಕಿಸಿದರು.

ಅಲ್ಲದೇ, ಇನ್ಸ್​​​ಪೆಕ್ಟರ್ ಹಾಗೂ ಸಬ್‌ಇನ್ಸ್‌ಪೆಕ್ಟರ್ ಬಂದೋಬಸ್ತ್ ಕೆಲಸದಲ್ಲಿದ್ದರೆ, ಹೆಡ್ ಕಾನ್‌ಸ್ಟೇಬಲ್ ತನಿಖೆ ನಡೆಸಿ, ವರದಿ ಸಿದ್ಧಪಡಿಸುತ್ತಾರೆ. ಆ ವರದಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಅಥವಾ ಸಬ್ ಇನ್ಸ್‌ಪೆಕ್ಟರ್ ಸಹಿ ಮಾಡಿ, ಕೋರ್ಟ್‌ಗೆ ಸಲ್ಲಿಸುತ್ತಾರೆ. ಹೆಡ್‌ ಕಾನ್‌ಸ್ಟೇಬಲ್‌ಗೆ ಕಾನೂನು ಬಗ್ಗೆ ಏನು ಗೊತ್ತಿರುತ್ತದೆ? ಅವರಲ್ಲಿ ಕೋರ್ಟ್ ತೀರ್ಪುಗಳ ಬಗ್ಗೆ ಮಾಹಿತಿ ಏನಿರುತ್ತದೆ? ಕಾನೂನು ತಿಳಿಯದಿದ್ದರೆ ಯಾವ ರೀತಿ ತನಿಖೆ ನಡೆಸಿರುತ್ತಾರೆ ಎಂದು ಪೀಠ ಪ್ರಶ್ನಿಸಿತು.

ಇದನ್ನೂ ಓದಿ: ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ - S M Krishna

ಮಹಜರು/ಪಂಚನಾಮೆ ವರದಿಯು ಅಪರಾಧ ಘಟನೆಯ ಸಂಕ್ಷಿಪ್ತ ಚಿತ್ರಣ ನೀಡುತ್ತದೆ. ಆರೋಪಿ ಘಟನೆ ಸ್ಥಳಕ್ಕೆ ಹೇಗೆ ಬಂದ? ಮರಳಿ ಹೇಗೆ ಹೋದ? ಹೇಗೆ ಕೃತ್ಯ ಎಸಗಿದ? ಆರೋಪಿಯನ್ನು ಯಾರಾದರೂ ನೋಡಿರುವ ಸಾಧ್ಯತೆ ಇದೆಯೇ? ಘಟನಾ ಸ್ಥಳದ ಸುತ್ತ ಏನೇನಿದೆ? ಎಂಬುದನ್ನು ಮಹಜರು ವರದಿ ತಿಳಿಸುತ್ತದೆ. ಈ ಎಲ್ಲಾ ವಿವರಗಳು ತಿಳಿಯದೇ ಹೋದರೆ ತನಿಖೆ ಹೇಗೆ ಸರಿ ದಾರಿಯಲ್ಲಿ ನಡೆಯುತ್ತದೆ. ಈ ತಪ್ಪುಗಳನ್ನು ಪೊಲೀಸರು/ತನಿಖಾಧಿಕಾರಿಗಳು ಸರಿಪಡಿಸಿಕೊಳ್ಳಬೇಕು. ತನಿಖಾಧಿಕಾರಿ ಸೂಕ್ತವಾಗಿ ಮಹಜರು ಮಾಡಬೇಕು. ಮಾಸ್ಕ್ ಧರಿಸಿ ಶವ ಪರೀಕ್ಷೆ ನಡೆಯುವ ಸ್ಥಳಕ್ಕೆ ಹೋಗಬೇಕು. ಕ್ರಿಮಿನಲ್ ಕಾನೂನುಗಳನ್ನು ತಿಳಿದಿರಬೇಕು ಎಂದು ತಿಳಿಸಿದ ನ್ಯಾಯಮೂರ್ತಿಗಳು, ಸರ್ಕಾರಿ ವಕೀಲರು-ಕಾನೂನು ತಜ್ಞರು ನಿಯಮಿತವಾಗಿ ಕಾರ್ಯಕ್ರಮ ನಡೆಸಬೇಕು. ಪೊಲೀಸರಿಗೆ ಕಾನೂನುಗಳ ಮಾಹಿತಿ ನೀಡಬೇಕೆಂದು ನ್ಯಾಯಮೂರ್ತಿಗಳು ತಿಳಿಸಿದರು.

Last Updated :May 7, 2024, 12:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.