ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಲು ಅನುಮತಿಸುವುದಕ್ಕೂ ಮುನ್ನ ಪ್ರಕರಣವು ಸುಪ್ರೀಂಕೋರ್ಟ್ನಲ್ಲಿ ವಿಚಾರಣಾ ಹಂತದಲ್ಲಿರುವುದನ್ನು ಪರಿಗಣನೆಯಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿರುವ ಹೈಕೋರ್ಟ್, ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಆದೇಶಿಸಿದೆ.
ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪಡೀಲ್ನಿಂದ ಬಿ ಸಿ ರೋಡ್ ರಸ್ತೆಯನ್ನು ಏಪ್ರಿಲ್ ಶುಕ್ರವಾರ 18ರಂದು ಮಧ್ಯಾಹ್ನ 12ರಿಂದ ರಾತ್ರಿ 9ರ ವರೆಗೆ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯ ಎ. ರಾಜೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟಿಸಲು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದರೆ ಮಾತ್ರ ಪ್ರತಿಭಟನೆ ನಡೆಸಬಹುದಾಗಿದೆ. ಯಾವುದೇ ಕಾರಣಕ್ಕೂ ರಸ್ತೆ ನಿರ್ಬಂಧಿಸಿ ಪ್ರತಿಭಟಿಸುವಂತಿಲ್ಲ. ಅನುಮತಿ ನೀಡಿರುವ ನಿರ್ದಿಷ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಸಬೇಕು. ಅನುಮತಿ ಇಲ್ಲದಿದ್ದರೆ ಪ್ರತಿಭಟನೆ ಮಾಡುವಂತಿಲ್ಲ. ಪ್ರಕರಣ ಸುಪ್ರೀಂಕೋರ್ಟ್ ಪರಿಗಣನೆಯಲ್ಲಿದೆ ಎಂಬುದನ್ನು ರಾಜ್ಯ ಸರ್ಕಾರವು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿತು.
ಅರ್ಜಿದಾರರ ಪರ ವಾದ ಮಂಡಿಸಿದ, ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ಅನುಮತಿಸುತ್ತಿದೆ. ಆ ಮಾರ್ಗದಲ್ಲಿ ದಿನವೂ ಅರ್ಜಿದಾರರು ಓಡಾಡುತ್ತಾರೆ. ಏಪ್ರಿಲ್ 18ರಂದು ಅಪಾರ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಖಾಸಗಿ ಮತ್ತು ಸರ್ಕಾರಿ ಬಸ್ಗಳ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿಭಟನೆಗೆ ಅನುಮತಿಸಿಲ್ಲ ಎಂದು ಹೇಳಲು ಸರ್ಕಾರ ಈಗಲೂ ಸಿದ್ಧವಿಲ್ಲ. ಮೊದಲಿಗೆ ಪ್ರತಿಭಟನೆಗೆ ಅನುಮತಿಯೇ ಇಲ್ಲ ಎಂದು ತಿಳಿಸಿದೆ.
ಸರ್ಕಾರಿ ವಕೀಲರು ಸರ್ಕಾರದ ಪರ ವಕೀಲರು, ಮಂಗಳೂರು ಪೊಲೀಸ್ ಆಯುಕ್ತರು ಏಪ್ರಿಲ್ 15ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಮಾರ್ಪಾಡು ಮಾಡಿ, ಷರತ್ತನ್ನು ಸಡಿಲಗೊಳಿಸಲಾಗಿದೆ. ಅಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಪರ್ಯಾಯ ರಸ್ತೆಗಳಲ್ಲಿ ಓಡಾಡುವಂತೆ ಸೂಚಿಸಲಾಗಿದೆ. ಅಡ್ಯಾರ್ನ ಶಾ ಗಾರ್ಡನ್ ಸಭಾಂಗಣದಲ್ಲಿ ಪ್ರತಿಭಟನೆ ನಡೆಯಲಿದೆ. ಮಧ್ಯಮ ಮತ್ತು ಬೃಹತ್ ಗಾತ್ರದ ವಾಹನಗಳಿಗೆ ಪರ್ಯಾಯ ರಸ್ತೆ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಅದಾಗ್ಯೂ, ಈ ವಿಚಾರವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿ: 30 ವರ್ಷ ಸೇವೆ ಸಲ್ಲಿಸಿದ ಅರಣ್ಯ ವೀಕ್ಷಕನ ಸೇವೆ ಖಾಯಂಗೊಳಿಸಲು ಆದೇಶಿಸಿದ ಹೈಕೋರ್ಟ್