ETV Bharat / state

ಡಿಕೆಶಿ​ ಸಲ್ಲಿಸಿದ್ದ ದಾವೆ ಬೆಂಗಳೂರಿಗೆ ವರ್ಗಾಯಿಸಲು ಕೋರಿ ಯತ್ನಾಳ್​ ಅರ್ಜಿ: ಡಿಸಿಎಂಗೆ ಹೈಕೋರ್ಟ್​ ನೋಟಿಸ್​

author img

By ETV Bharat Karnataka Team

Published : Mar 18, 2024, 9:12 PM IST

high-court-notice-to-dcm-dk-shivakumar-in-mla-yatnal-petition-seeking-transfer-of-case
ಡಿಕೆಶಿ​ ಸಲ್ಲಿಸಿದ್ದ ದಾವೆ ಬೆಂಗಳೂರಿಗೆ ವರ್ಗಾಯಿಸಲು ಕೋರಿ ಯತ್ನಾಳ್​ ಅರ್ಜಿ: ಡಿಸಿಎಂಗೆ ಹೈಕೋರ್ಟ್​ ನೋಟಿಸ್​

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಲ್ಲಿಸಿರುವ ದಾವೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​​ಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ವಿರುದ್ಧ 204 ಕೋಟಿ ರೂ. ಪರಿಹಾರ ಕೋರಿ ದಾಖಲಿಸಿರುವ ದಾವೆಯನ್ನು ಕನಕಪುರದಿಂದ ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.

ಬಸನಗೌಡ ಪಾಟೀಲ್ ಸಲ್ಲಿಸಿರುವ ಸಿವಿಲ್​ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ನ್ಯಾಯಪೀಠ, ನೋಟಿಸ್​ ಜಾರಿಗೊಳಿಸಿದೆ. ಡಿ.ಕೆ.ಶಿವಕುಮಾರ್ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗುವ ವಕೀಲರಿಗೆ ಹ್ಯಾಂಡ್ ಸಮನ್ಸ್ ಮೂಲಕ ನೋಟಿಸ್ ನೀಡಲು ಅನುಮತಿಸಿರುವ ಪೀಠವು, ವಿಚಾರಣೆಯನ್ನು ಮಾರ್ಚ್ 20ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ 2019ರ ಜೂನ್ 23ರಂದು ವಿಜಯಪುರದಲ್ಲಿ ಯತ್ನಾಳ್ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಅವರು ನಮ್ಮ (ಬಿಜೆಪಿ) ನಾಯಕರನ್ನು ಭೇಟಿ ಮಾಡಿ, ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ ಪ್ರಕರಣಗಳಿಂದ ರಕ್ಷಣೆ ಕೊಡಿಸುವಂತೆ ಕೋರಿದ್ದಾರೆ. ಈ ಸಂಬಂಧ ಡಿ.ಕೆ.ಶಿವಕುಮಾರ್ ಅವರು ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಮೂಲಕ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎಂಬುದು ನನಗೆ ತಿಳಿದಿದೆ. ತಮ್ಮ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ತಿಳಿದಿದೆ ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಈ ಹೇಳಿಕೆಯನ್ನು ಆಧರಿಸಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ಯತ್ನಾಳ್ ವಿರುದ್ಧ ಅಸಲು ದಾವೆ ಹೂಡಿದ್ದರು. ತಮ್ಮ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದೆ. ಇದಕ್ಕಾಗಿ 204 ಕೋಟಿ ರೂಪಾಯಿ ಹಾನಿ ತುಂಬಿಕೊಡಲು ಯತ್ನಾಳ್​ಗೆ ಆದೇಶಿಸಬೇಕು ಎಂದು ಕೋರಿದ್ದರು. ಈ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಯತ್ನಾಳ್ ಕೋರಿದ್ದಾರೆ.

ಅರ್ಜಿಯಲ್ಲಿ ಏನಿದೆ: ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ.ಕೆ.ಶಿವಕುಮಾರ್ ಅವರು ಕನಕಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್​ಸಿಯಲ್ಲಿ ದಾವೆ ಹೂಡಿದ್ದಾರೆ. ತಾನು ವಿಜಯಪುರದ ಶಾಸಕನಾಗಿದ್ದು, ವಿಜಯಪುರ - ಕನಕಪುರದ ನಡುವಿನ ಅಂತರ 565 ಕಿ.ಮೀ. ಇದೆ. ಹೀಗಾಗಿ, ಪ್ರಕರಣವನ್ನು ಕನಕಪುರದಿಂದ ಬೆಂಗಳೂರಿಗೆ ವರ್ಗಾಯಿಸಬೇಕು. ತಾನು ಕನಕಪುರಕ್ಕೆ ಭೇಟಿ ನೀಡಿದರೆ ತನ್ನ ಮೇಲೆ ದಾಳಿಯಾಗುವ ಸಂಭವವಿದೆ. 2008ರಿಂದ ಡಿ.ಕೆ.ಶಿವಕುಮಾರ್ ಅವರು ಕನಕಪುರದ ಶಾಸಕರಾಗಿದ್ದು, ಸಾಕ್ಷಿ ತಿರುಚುವ ಸಾಧ್ಯತೆ ಇದೆ. ತಾನು ವಿಜಯಪುರದಲ್ಲಿ ಹೇಳಿಕೆ ನೀಡಿದ್ದು, ಕನಕಪುರದಲ್ಲಿ ದಾವೆ ಹೂಡಲಾಗಿದೆ. ಹೀಗಾಗಿ, ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಪತ್ನಿ ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸಲು ಮುಂದಾದ ಪತಿ: ಹೆಂಡತಿಗೆ 50 ಸಾವಿರ ಪರಿಹಾರ ನೀಡುವಂತೆ ಆದೇಶಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.