ETV Bharat / state

ನನ್ನ ಜೀವಮಾನದಲ್ಲಿ ಇಷ್ಟು ಕಳಪೆ ಬಜೆಟ್ ನೋಡಿರಲಿಲ್ಲ: ಯಡಿಯೂರಪ್ಪ

author img

By ETV Bharat Karnataka Team

Published : Feb 16, 2024, 3:44 PM IST

ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ
ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್​ ಎಲ್ಲಾ ದೃಷ್ಠಿಕೋನದಲ್ಲೂ ಕಳಪೆಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಬೆಂಗಳೂರು: ನಾನು ನನ್ನ ಜೀವಮಾನದಲ್ಲಿಯೇ ಇಂತಹ ಕಳಪೆ ಮುಂಗಡ ಪತ್ರವನ್ನು ನೋಡಿರಲಿಲ್ಲ. 14 ಬಜೆಟ್‌ಗಳನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಇಂತಹ ಕಳಪೆ 15ನೇ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನವದೆಹಲಿ ಪ್ರವಾಸದಲ್ಲಿರುವ ಅವರು, ರಾಜ್ಯ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಜೆಟ್‌ನ ಬಹುತೇಕ ಅಂಶಗಳನ್ನು ಕೇಂದ್ರ ಸರ್ಕಾರವನ್ನು ದೂರಲು ಮೀಸಲಿಡಲಾಗಿದೆಯೇ ಹೊರತು, ರಾಜ್ಯದ ಅಭಿವೃದ್ಧಿಗೆ ನಮ್ಮ ಕೊಡುಗೆ ಏನು? ಎಂಬುದನ್ನು ಎಲ್ಲಿಯೂ ಪ್ರಸ್ತಾಪಿಸಿಲ್ಲ ಎಂದಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಈ ಆಯವ್ಯಯ ಕಾಣುತ್ತಿದೆ. ವಾಸ್ತವಿಕ ಅಂಕಿಸಂಖ್ಯೆಗಳನ್ನು ನೀಡದೆ ಕೇವಲ ಕಾಲ್ಪನಿಕ ಅಂಕಿಸಂಖ್ಯೆಗಳನ್ನು ನೀಡಿ ಕೇಂದ್ರ ಸರ್ಕಾರದಿಂದ ಇನ್ನೂ ಹೆಚ್ಚುವರಿ ಅನುದಾನ ಬರಬೇಕಿತ್ತು ಎಂದು ಸಬೂಬು ಹೇಳುತ್ತಾ, ರಾಜ್ಯದ ಜನರನ್ನು ದಿಕ್ಕು ತಪ್ಪಿಸಲೆಂದೇ ಮಾಡಿದ ಆಯವ್ಯಯದಂತೆ ಗೋಚರಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಆಯವ್ಯಯ ರಾಜ್ಯದ ಜನರಿಗೆ ಮಾಡಿದ ಮಹಾ ಮೋಸದಂತೆ ಗೋಚರವಾಗುತ್ತಿದೆ. ರಾಜ್ಯದ ಜನರಿಗೆ ಮೋಸ ಮಾಡುವುದಿರಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ವಹಿಸುತ್ತಿರುವ ಜಲಸಂಪನ್ಮೂಲ ಇಲಾಖೆಗೆ ಯಾವುದೇ ಅನುದಾನ ನೀಡದೆ ಅವರಿಗೂ ಮೋಸ ಹಾಗೂ ಅನ್ಯಾಯ ಮಾಡಿರುವುದು ಎದ್ದು ಕಾಣುತ್ತಿದೆ. ಡಿ.ಕೆ.ಶಿವಕುಮಾರ್ "ಮೇಕೆದಾಟು" ಪಾದಯಾತ್ರೆ ಮಾಡಿ ಸಾಧನೆ ಮಾಡಿದ್ದರು. ಆದರೆ ಈ ಯೋಜನೆಯನ್ನು ಆರಂಭಿಸುವ ಯಾವ ಖಾತರಿಯೂ ಈ ಆಯವ್ಯಯದಲ್ಲಿಲ್ಲ. ಕೃಷ್ಣ ಕೊಳ್ಳದ ಯೋಜನೆಗಳಿಗೆ ಹಾಗೂ ಮಹಾದಾಯಿ ಯೋಜನೆ ಹಾಗೂ ನವಿಲೆ ಜಲಾಶಯ ಯೋಜನೆಗೆ ಅನುದಾನ ನಿಗದಿಪಡಿಸಿಲ್ಲ. ಇದರಿಂದ ರೈತರಿಗೆ ಹಾಗೂ ಹಿಂದುಳಿದ ಭಾಗಗಳಾದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಯಾವುದೇ ಅನುದಾನ ನಿಗಧಿಪಡಿಸಿಲ್ಲ. ಕೇವಲ ಘೋಷಣೆಗಳನ್ನಷ್ಟೇ ಮಾಡಲಾಗಿದೆ. ಇದರಿಂದ ಬೆಂಗಳೂರಿನ ಯಾವ ಸಮಸ್ಯೆಗಳಿಗೂ ಮುಕ್ತಿ ಸಿಗುವುದಿಲ್ಲ. ಪರಿಣಾಮವಾಗಿ ಬೆಂಗಳೂರಿಗೆ ಹರಿದು ಬರುವ ಬಂಡವಾಳ ಹೂಡಿಕೆ ಕಡಿಮೆಯಾಗಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಬಜೆಟ್ ನಿರಾಶಾದಾಯಕ ಎಂದಿದ್ದಾರೆ.

ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ 7ನೇ ವೇತನ ಆಯೋಗ ಅನುಷ್ಠಾನಗೊಳಿಸುವ ಬಗ್ಗೆ ಯಾವುದೇ ಸ್ಪಷ್ಟವಾದ ಘೋಷಣೆ ಇಲ್ಲ. ಇದರಿಂದ ಖಜಾನೆ ಖಾಲಿಯಾಗಿರುವುದು ಕಂಡುಬರುತ್ತದೆ. ಒ.ಪಿ.ಎಸ್ ಯೋಜನೆ ಪುನರ್ ಜಾರಿಗೆ ತರುತೇವೆ ಎಂದು ಆಶ್ವಾಸನೆ ಮಾಡಿ ಬಂದ ಸರ್ಕಾರ ಈ ಬಗ್ಗೆ ಚಕಾರವನ್ನೇ ಎತ್ತಿಲ್ಲ. ತಮ್ಮ ವರುಣಾ ಕ್ಷೇತ್ರಕ್ಕೆ 2000 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಒದಗಿಸಿದ್ದು, ರಾಜ್ಯದ ಬೇರೆ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದೇ ತಾರತಮ್ಮ ಮೆರೆದಿದ್ದಾರೆ.

2023-24ನೇ ಸಾಲಿನಲ್ಲಿ 12,522 ಕೋಟಿ ರೂ.ಗಳ ರಾಜಸ್ವ ಕೊರತೆ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ 2024-25ನೇ ಸಾಲಿಗೆ ರೂ. 27,353 ಕೋಟಿಗಳ ರಾಜಸ್ವ ಕೊರತೆ ಬಜೆಟ್ ಮಂಡಿಸುತ್ತಿರುವುದು, ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂಬುದರ ಸ್ವಷ್ಟ ಸೂಚನೆಯಾಗಿದೆ. 2023-24ನೇ ಸಾಲಿನಲ್ಲಿ 85,928 ಕೋಟಿ ರೂ. ಸಾಲ ಮಾಡಲಾಗಿದೆ. 2024-25ನೇ ಸಾಲಿನಲ್ಲಿ 1,05,496 ಕೋಟಿ ರೂ.ಗಳಿಗೆ ಸಾಲದ ಮೊತ್ತ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಅಭಿವೃದ್ಧಿ 20 ವರ್ಷ ಹಿಂದಕ್ಕೆ ಕೊಂಡೊಯ್ದ ಬಜೆಟ್: ವಿಜಯೇಂದ್ರ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.