ETV Bharat / state

ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ದಿನೇಶ್ ಗುಂಡೂರಾವ್

author img

By ETV Bharat Karnataka Team

Published : Mar 3, 2024, 7:11 AM IST

ತೆರಿಗೆ ಹಣ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ. ಈ ಕುರಿತು ಬಿಜೆಪಿ ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ದೂರಿದರು.

ಸಚಿವ ದಿನೇಶ್ ಗುಂಡೂರಾವ್  ತೆರಿಗೆ ಹಣ ಹಂಚಿಕೆಯಲ್ಲಿ ಅನ್ಯಾಯ  ಸೆಸ್​ ಮತ್ತು ಸರ್​ಚಾರ್ಜ್​ Minister Dinesh Gundurao  central government
ತೆರಿಗೆ ಹಣ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ, ಬಿಜೆಪಿಯಿಂದ ತಪ್ಪು ಮಾಹಿತಿ ರವಾನೆ: ದಿನೇಶ್ ಗುಂಡೂರಾವ್

ಮಂಗಳೂರು: ''ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 4.30 ಲಕ್ಷ ರೂ ಕೋಟಿ ತೆರಿಗೆ ಹೋಗುತ್ತಿದೆ. ಆದರೆ, ರಾಜ್ಯಕ್ಕೆ 52 ಸಾವಿರ ಕೋಟಿ ರೂ ಮಾತ್ರ ನೀಡುತ್ತಿದ್ದಾರೆ. ಈ ವಿಚಾರವನ್ನು ಹೇಳಿದರೆ ಬಿಜೆಪಿಯವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಬಜೆಟ್ ಗಾತ್ರಕ್ಕೆ ಅನುಗುಣವಾಗಿ ಶೇಕಡಾವಾರು ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಕುರಿತು ಬಿಜೆಪಿ ಅಂಕಿಅಂಶಗಳನ್ನು ನೀಡಲಿ'' ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಸೆಸ್​ ಮತ್ತು ಸರ್​ಚಾರ್ಜ್‌​ಗಳನ್ನು ತೆರಿಗೆ ಹಂಚಿಕೆಯಿಂದ ಹೊರಗಿಡಲಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಸೆಸ್​ ಮತ್ತು ಸರ್​ಚಾರ್ಜ್​ಗಳನ್ನು ಕಳೆದ ಕೆಲವು ವರ್ಷಗಳಿಂದ ಹೆಚ್ಚಿಸಿ ತನ್ನ ರಾಜಸ್ವ ಸಂಗ್ರಹಣೆಯನ್ನು ಏರಿಸಿಕೊಂಡಿದೆ. ಇದರಿಂದ ರಾಜ್ಯಕ್ಕೆ ಹಂಚಿಕೆಯಾಗುವ ತೆರಿಗೆ ಪಾಲು ಕಡಿಮೆಯಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ವಿಧಿಸುವ ಸೆಸ್​ ಮತ್ತು ಸರ್​ಚಾರ್ಜ್​ಗಳಲ್ಲಿ ಶೇ.428ರಷ್ಟು ಹೆಚ್ಚಳವಾಗಿದೆ. ಕೇಂದ್ರದ ಆಯವ್ಯಯ ಗಾತ್ರ ಶೇ.195ರಷ್ಟು ಏರಿದೆ'' ಎಂದು ದೂರಿದರು.

''15ನೇ ಹಣಕಾಸು ಆಯೋಗವು ಕೇಂದ್ರ ಹಾಗೂ ರಾಜ್ಯಗಳ ನಡುವೆ ಸಂಪನ್ಮೂಲ ಹಂಚಿಕೆಗೆ 2011ರ ಜನಗಣತಿಯನ್ನು ಪರಿಗಣಿಸಿರುವುದು ಸರಿಯೆಂದು ಬಿಜೆಪಿ ಹೇಳುತ್ತಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯೆ ನಿಯಂತ್ರಿಸುವ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದವು. 1971ರಲ್ಲಿ ಕರ್ನಾಟಕದ ಜನಸಂಖ್ಯೆ ಬೆಳವಣಿಗೆ ದರ ಶೇ.24.22ಗಳಷ್ಟಿದ್ದು, ಇದು ಉತ್ತರಪ್ರದೇಶ ಮತ್ತು ಬಿಹಾರಕ್ಕಿಂತ ಹೆಚ್ಚು. 2011ರಲ್ಲಿ ರಾಜ್ಯದ ಬೆಳವಣಿಗೆ ದರ ಶೇ.15.61ಕ್ಕಿಳಿದರೆ, ಬಿಹಾರದ್ದು ಶೇ.25.42ಕ್ಕೆ ಏರಿಕೆಯಾಗಿದೆ. ಉತ್ತರಪ್ರದೇಶದ್ದು ಶೇ.20.23ಕ್ಕೆ ಏರಿಕೆಯಾಗಿದೆ. ಪ್ರಗತಿಪರ ರಾಜ್ಯಗಳಾದ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ಜನಸಂಖ್ಯೆಯನ್ನು ನಿಯಂತ್ರಿಸುತ್ತಿದೆ. ಆದರೆ, ಬಿಹಾರ, ಉತ್ತರ ಪ್ರದೇಶ, ಛತೀಸ್‌ಗಢ, ಜಾರ್ಖಂಡ್‌ ಮತ್ತು ರಾಜಸ್ಥಾನ ರಾಜ್ಯಗಳು ಜನಸಂಖ್ಯೆಯನ್ನು ನಿಯಂತ್ರಿಸಲು ವಿಫಲವಾಗಿವೆ'' ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಹಣದ ಹರಿವು ಹೆಚ್ಚಳ: ''ಗ್ಯಾರಂಟಿ ಯೋಜನೆಗಳು ಸಾರ್ವತ್ರಿಕ ಮೂಲ ಆದಾಯವನ್ನು ಒದಗಿಸುವ ಉದ್ದೇಶ ಹೊಂದಿದ್ದು, ಇದರಿಂದ ಜನರಲ್ಲಿ ಹಣದ ಹರಿವು ಹೆಚ್ಚಾಗಿದೆ. ಇದು ಜನರಲ್ಲಿ ಖರೀದಿಸುವ ಸಾಮರ್ಥ್ಯ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಖಾಸಗಿ ಬಂಡವಾಳ ಹೂಡಿಕೆ ಮತ್ತು ಉತ್ಪಾದಕತೆ ಹೆಚ್ಚಲಿದೆ. ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದಲ್ಲಿ ಇತರೆ ರಾಜ್ಯಗಳಿಗೆ ಹೋಲಿಸಿದಾಗ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹಣೆಯಾಗಿದೆ. ತೀವ್ರ ಬರದ ನಡುವೆಯೂ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹಿಸುವ 2ನೇ ರಾಜ್ಯ. 2022-23ಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಜಿಎಸ್‌ಟಿ ಸಂಗ್ರಹಣೆ ಶೇ.18ರಷ್ಟು ಹೆಚ್ಚಳ ಕಂಡಿದೆ'' ಎಂದರು.

''ಶಕ್ತಿ ಯೋಜನೆ ಕುಂದು ಕೊರತೆಗಳನ್ನು ನೀಗಿಸಲು ಸರ್ಕಾರವು 8,383 ಚಾಲಕರು ಮತ್ತು ಕಂಡಕ್ಟರ್‌ಗಳ ನೇಮಕಾತಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಲ್ಲದೇ ಸರ್ಕಾರವು ಇಲ್ಲಿಯವರೆಗೆ 1,235 ಹೊಸ ಬಸ್‌ಗಳನ್ನು ಖರೀದಿಸಿದೆ. ಇನ್ನೂ 3,619 ಬಸ್‌ಗಳ ಖರೀದಿ ಪ್ರಕ್ರಿಯೆ ಬಾಕಿ ಇದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ'' ಎಂದು ತಿಳಿಸಿದರು.

ಇದನ್ನೂ ಓದಿ: ನಮ್ಮ ಯೋಜನೆಗಳಿಂದ ಜನರ ಕೈಯಲ್ಲಿ ಹಣ ಹರಿದಾಡುತ್ತಿದೆ, ಆರ್ಥಿಕತೆಗೆ ಉತ್ತೇಜನ ಸಿಕ್ಕಿದೆ: ಡಿಸಿಎಂ ಡಿ ಕೆ ಶಿವಕುಮಾರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.