ETV Bharat / state

ಜೆರೋಸಾ ಶಾಲೆಯಲ್ಲಿ ಧಾರ್ಮಿಕ ನಿಂದನೆ ಪ್ರಕರಣ: ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

author img

By ETV Bharat Karnataka Team

Published : Feb 19, 2024, 9:49 PM IST

Etಜೆರೋಸಾ ಶಾಲೆಯಲ್ಲಿ ಧಾರ್ಮಿಕ ನಿಂದನೆ ಪ್ರಕರಣ: ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ
ಜೆರೋಸಾ ಶಾಲೆಯಲ್ಲಿ ಧಾರ್ಮಿಕ ನಿಂದನೆ ಪ್ರಕರಣ: ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

ಜೆರೋಸಾ ಶಾಲೆ ಧಾರ್ಮಿಕ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ತನೆಖೆ ಆರಂಭಿಸಿದ್ದಾರೆ.

ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧಾರ್ಮಿಕ ನಿಂದನೆ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ಕೊಟ್ಟಾರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್​ನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಆಕಾಶ್ ಶಂಕರ್, ಪ್ರಕರಣದ ಸತ್ಯಾಸತ್ಯತೆ ಅರಿಯಲು ಸಭೆ ನಡೆಸಿದ್ದೇನೆ. ಹಂತಹಂತವಾಗಿ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾಹಿತಿ ಪಡೆದು, ತನಿಖೆ ನಡೆಸಲಿದ್ದೇನೆ. ಸದ್ಯ ವಿಚಾರಣೆ ನಡೆಯುತ್ತಿದೆ. ಪ್ರಾಥಮಿಕ ಹಂತದಲ್ಲಿ ವಿಚಾರಣೆ ಕುರಿತಂತೆ ಏನನ್ನು ಹೇಳಲಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದೇನೆ. ಪ್ರಾಮಾಣಿಕವಾಗಿ ಈ ತನಿಖೆ ನಡೆಸಲಿದ್ದೇನೆ ಎಂದು ಹೇಳಿದರು.

ಪ್ರಕರಣದ ಹಿನ್ನೆಲೆ ಏನು: ಮಂಗಳೂರಿನ ಜೆಪ್ಪುವಿನಲ್ಲಿರುವ ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸಿಸ್ಟರ್​ ಪ್ರಭಾ ಎಂಬುವರು ತರಗತಿಯಲ್ಲಿ ಧಾರ್ಮಿಕ ನಿಂದನೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದರು. ಫೆ.10ರ ಶನಿವಾರ ಪೋಷಕರು ಶಾಲಾ ಗೇಟ್ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಫೆ.12 ರಂದು ಕೆಲ ಸಂಘಟನೆಗಳ ಕಾರ್ಯಕರ್ತರು ಶಿಕ್ಷಣ ಸಂಸ್ಥೆ ಮುಂದೆ ಜಮಾಯಿಸಿ ಶಿಕ್ಷಕಿಯ ಅಮಾನತಿಗೆ ಆಗ್ರಹಿಸಿದ್ದರು.

ಸಂಜೆಯ ವೇಳೆಗೆ ಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಯೊಂದಿಗೆ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದರು. ಆ ಬಳಿಕ ಮುಖ್ಯ ಶಿಕ್ಷಕಿ ಅನಿತಾ ಎಂಬುವರು ಸಿಸ್ಟರ್​ ಪ್ರಭಾರನ್ನು ವಜಾಗೊಳಿಸಿದ್ದರು. ಅಲ್ಲದೇ ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಕ ಮಾಡಿತ್ತು.

ಇದರ ಬೆನ್ನಲ್ಲೇ ಈ ಘಟನೆ ಕುರಿತು ವಿಶೇಷ ತನಿಖೆ ನಡೆಸಲು ಐಎಎಸ್ ಅಧಿಕಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತ ಆಕಾಶ್ ಶಂಕರ್​ ಅವರನ್ನು ನೇಮಕ ಮಾಡಿ ಶನಿವಾರ ಸಚಿವ ದಿನೇಶ್​ ಗುಂಡೂರಾವ್​ ಆದೇಶ ಮಾಡಿದ್ದರು.

ಇದನ್ನೂ ಓದಿ: ಮಂಗಳೂರು: ಧಾರ್ಮಿಕ ನಿಂದನೆ ಆರೋಪ; ಸಂತ ಜೆರೋಸಾ ಶಾಲಾ ಶಿಕ್ಷಕಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.