ETV Bharat / state

ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ

author img

By ETV Bharat Karnataka Team

Published : Mar 1, 2024, 12:41 PM IST

Updated : Mar 1, 2024, 1:18 PM IST

ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

kagawada-tehsildar-reacts-on-woman-assault-case
ಜಮೀನು ವಿವಾದ ಹಿನ್ನೆಲೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ; ತಹಸೀಲ್ದಾರ್​ ಹೇಳಿದ್ದೇನು?

ತಹಶೀಲ್ದಾರ್ ಪ್ರತಿಕ್ರಿಯೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ಮಾಡಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಸ್ಥಳಕ್ಕೆ ಬೆಳಗಾವಿ ಎಎಸ್​​ಪಿ ಶೃತಿ ಹಾಗೂ ಕಾಗವಾಡ ತಹಶೀಲ್ದಾರ್ ಸಂಜಯ್ ಇಂಗಳಿ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

1993ರಲ್ಲಿ ನಮ್ಮ ಕುಟುಂಬವೊಂದಕ್ಕೆ ಸರ್ಕಾರದಿಂದ ಮೂರು ಎಕರೆ ಜಮೀನು ಮತ್ತು ಹೊಲಕ್ಕೆ ರಸ್ತೆ ಮಂಜೂರು ಮಾಡಲಾಗಿತ್ತು. ಆದರೆ, ''ನಮ್ಮ ಜಮೀನಿಗೆ ಹೊಂದಿಕೊಂಡಿರುವ ಪಕ್ಕದವರು ನಮ್ಮ 20 ಗುಂಟೆ ಅತಿಕ್ರಮಣ ಮಾಡಿಕೊಂಡು ತೊಂದರೆ ಕೊಡುತ್ತಿದ್ದಾರೆ. ಮಹಿಳೆ ಹಾಗೂ ಆಕೆಯ ಮಗನ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಇದೇ ವೇಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ'' ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಈ ಹಿಂದೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆನ್ನಲಾದ ವಿಡಿಯೋವೊಂದು ಇತ್ತೀಚೆಗೆ ವೈರಲ್​ ಆಗಿತ್ತು.

ಸ್ಥಳಕ್ಕೆ ಬೆಳಗಾವಿ ಪೊಲೀಸ್ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ತಹಶೀಲ್ದಾರ್ ಅವರು ಜಮೀನಿನ ಸರ್ವೆ ಕಾರ್ಯ ನಡೆಸಿ, ಒತ್ತುವರಿ ತೆರವು ಮಾಡಿದ್ದಾರೆ. ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಆರೋಪ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ತಹಶೀಲ್ದಾರ್ ಸಂಜಯ್ ಇಂಗಳಿ ಅವರು, ''ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ನೋಡಿ ಸ್ಥಳಕ್ಕೆ ನಾನು ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿದ್ದೇವೆ. ಕುಟುಂಬಕ್ಕೆ ಸರ್ಕಾರದಿಂದ 1993 ರಲ್ಲಿ ಮೂರು ಎಕರೆ ಜಮೀನು ಮಂಜೂರಾಗಿದೆ. ಇದರ ಪಕ್ಕ ರಸ್ತೆ ಇರುವುದರಿಂದ ಆ ರಸ್ತೆಯನ್ನು ತೆರವು ಮಾಡಬೇಕೆಂದು ನೊಂದ ಮಹಿಳೆಯ ಕುಟುಂಬಸ್ಥರು ನಮ್ಮ ಗಮನಕ್ಕೆ ತಂದಿದ್ದಾರೆ. ಎಲ್ಲ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅವರ ಮಾರ್ಗದರ್ಶನದಂತೆ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ಹಳೆಯ ಪ್ರಕರಣವಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುತ್ತಾರೆ'' ಎಂದು ಹೇಳಿದರು.

ಕಳೆದ ವರ್ಷದ ಜುಲೈ ತಿಂಗಳಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ದೃಶ್ಯಾವಳಿ ಇರುವವರು ಹಾಗೂ ಸುತ್ತಮುತ್ತಲಿನ ನಿವಾಸಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಗಜರಾಜ ಪ್ರತ್ಯಕ್ಷ: ಆತಂಕಗೊಂಡ ಜನರು

Last Updated :Mar 1, 2024, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.