ETV Bharat / state

ಡಿಸಿಸಿ, ಪಿಕಾರ್ಡ್ ಬ್ಯಾಂಕ್​ಗಳ ಸುಸ್ತಿಸಾಲ ಬಡ್ಡಿ ಮನ್ನಾ; ಡಿಸಿಸಿ ಬ್ಯಾಂಕುಗಳ ಬಾಕಿ ಬಿಡುಗಡೆಗೆ ನಿರ್ಧಾರ

author img

By ETV Bharat Karnataka Team

Published : Feb 16, 2024, 3:05 PM IST

ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಸೇರಿದಂತೆ ಸಹಕಾರ ವಲಯಕ್ಕೆ ಕೆಲವೊಂದು ಯೋಜನೆಗಳನ್ನು ಇಂದಿನ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

DCC Picard banks  waive interest on bad loans
DCC Picard banks waive interest on bad loans

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್​ನಲ್ಲಿ ಸಹಕಾರ ವಲಯಕ್ಕೆ ಕೆಲವು ಕೊಡುಗೆಗಳನ್ನು ನೀಡಿದ್ದಾರೆ. ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು ಹೆಚ್ಚಿಸುವುದು, ರೈತರಿಗೆ ನೀಡಲಾಗುವ ಸಾಲದ ಪ್ರಮಾಣ ಹೆಚ್ಚಿಸುವುದು, ಡಿಸಿಸಿ ಬ್ಯಾಂಕ್​ಗಳ ಬಾಕಿ ಮೊತ್ತ ಬಿಡುಗಡೆ ಮಾಡುವ ಕುರಿತಂತೆ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ. ಒಟ್ಟಾರೆಯಾಗಿ ಸಹಕಾರ ವಲಯಕ್ಕೆ ಇಂದಿನ ಬಜೆಟ್​ನಲ್ಲಿ ಘೋಷಿಸಲಾದ ಯೋಜನೆಗಳು ಹಾಗೂ ಅನುದಾನದ ವಿವರ ಹೀಗಿದೆ..

  • 2023-24ನೇ ಸಾಲಿನಲ್ಲಿ ಬಡ್ಡಿರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇಕಡಾ 3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ನಿರ್ಧಾರ.
  • ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ದಾಖಲೆಯ 27,000 ಕೋಟಿ ರೂ.ಗಳಷ್ಟು ಸಾಲ ವಿತರಿಸುವ ಗುರಿ.
  • ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕ್ರಮ.
  • ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು.
  • ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತ ಬಿಡುಗಡೆ ಮಾಡಲು ನಿರ್ಧಾರ.
  • ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ತೀರ್ಮಾನ. ಇದರಿಂದ ಸುಮಾರು 57,000 ರೈತರಿಗೆ ಅನುಕೂಲವಾಗಲಿದೆ. ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆ. ಇದಕ್ಕೆ 450 ಕೋಟಿ ರೂ. ಅನುದಾನ.
  • ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ.
  • ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇಕಡಾ 50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ.
  • ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ.
  • ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳ ನಿರ್ಮಾಣ.
  • ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಮತ್ತು ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.
  • ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಮಾರುಕಟ್ಟೆಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.
  • ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟೈಸ್​ ಮಾಡಲಾಗುವುದು.
  • ಎಪಿಎಂಸಿಗಳಲ್ಲಿ ಪಿಪಿಪಿ ಮಾದರಿಯಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್​ ಕೇಂದ್ರ ಹಾಗೂ ಪೆಟ್ರೋಲ್ ಬಂಕ್​ ಸ್ಥಾಪನೆ.
  • ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚನೆ.
  • ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮ.
  • ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಮತ್ತು ತೂಕದಲ್ಲಾಗುವ ಮೋಸ ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ ಎಪಿಎಂಸಿಗಳ ಮೂಲಕ ವೇ-ಬ್ರಿಜ್​ಗಳ ಸ್ಥಾಪನೆ.
  • ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳ ಸ್ಥಾಪನೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.