ಬೆಂಗಳೂರು: ಬಹು ಚರ್ಚಿತ ಜಾತಿ ಸಮೀಕ್ಷೆ ಬಗ್ಗೆ ರಾಜ್ಯ ಸರ್ಕಾರವು ಕೆಲವು ಅಧಿಕೃತ ಮಾಹಿತಿಗಳನ್ನು ಹಂಚಿಕೊಂಡಿದೆ. ಸಾಮಾನ್ಯ ಸಂಗತಿಗಳ ವಿವರಗಳನ್ನು ಮಾತ್ರ ನೀಡಿದ್ದು ರಾಜ್ಯದ ಜನತೆ ಕುತೂಹಲದಿಂದ ನಿರೀಕ್ಷಿಸುತ್ತಿರುವ ಜಾತಿವಾರು ಜನಸಂಖ್ಯೆಯ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೇ ಗೌಪ್ಯತೆಯನ್ನ ಕಾಪಾಡಿಕೊಳ್ಳುತ್ತಿದೆ. ಈ ಬಗ್ಗೆ ಇದೇ ತಿಂಗಳ 17ರಂದು ಜಾತಿ ಗಣತಿ ಸಮೀಕ್ಷೆ ಬಗ್ಗೆಯೇ ಚರ್ಚಿಸಲು ವಿಶೇಷವಾಗಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ವಿವರಗಳನ್ನು ಪ್ರಸ್ತಾಪಿಸಿ ನಿರ್ಣಯ ತಗೆದುಕೊಳ್ಳುವ ಸಾಧ್ಯತೆಗಳಿವೆ.
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕೆಲವು ವಿವರಗಳನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದೆ. ಆ ಪ್ರಕಾರ ರಾಜ್ಯದ 6.35 ಕೋಟಿ ಜನಸಂಖ್ಯೆಯಲ್ಲಿ 5.98 ಕೋಟಿ ಜನರ ಸಮೀಕ್ಷೆ ನಡೆಸಲಾಗಿದೆ. 1.35 ಕೋಟಿ ಕುಟುಂಬಗಳು ಶೇ. 94.17 ರಷ್ಟು ಮಾಹಿತಿ ಸಂಗ್ರಹಣೆಯಲ್ಲಿ ಪಾಲ್ಗೊಂಡಿವೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ನಡೆಸಿದ ಸಾಮಾಜಿಕ , ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ದಿನಾಂಕ: 29.02.2024ರಂದು ಸರಕಾರಕ್ಕೆ ಸಲ್ಲಿಸಿದೆ. ಈ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ಅನುಸಾರವಾಗಿ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು.
ಹೆಚ್.ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2015ರ ಏಪ್ರಿಲ್ 11ರಿಂದ ಪ್ರಾರಂಭಿಸಿ, 2015ರ ಮೇ 30ರಂದು ಪೂರ್ಣಗೊಳಿಸಿರುತ್ತದೆ.
ಜಾತಿ ಗಣತಿ ಸಮೀಕ್ಷೆಯ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ 54 ಮಾನದಂಡಗಳ ಕುರಿತು ಕುಟುಂಬದ ಅನುಸೂಚಿ-3ರಲ್ಲಿ ಮಾಹಿತಿಯನ್ನು ಸಂಗ್ರಹಿಸಲಾಗಿರುತ್ತದೆ. ಸಮೀಕ್ಷೆಯಲ್ಲಿ ಲಭ್ಯವಾಗಿರುವ ಅಂಕಿ-ಅಂಶಗಳನ್ನು ಆಯಾ ಜಿಲ್ಲೆಗಳಲ್ಲಿಯೇ ಗಣಕೀಕರಣಗೊಳಿಸಲಾಗಿದೆ. ಬಿಇಎಲ್ ಸಂಸ್ಥೆ ಜೊತೆ ಗಣಕೀಕರಣಕ್ಕಾಗಿ ರೂ.43.09 ಕೋಟಿಗಳ ಒಡಂಬಡಿಕೆ ಮಾಡಿಕೊಳ್ಳಲಾಗಿರುತ್ತದೆ. 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕೇಂದ್ರ ಸರ್ಕಾರದಿಂದ ರೂ.7.00 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ.185.79 ಕೋಟಿ ಸೇರಿದಂತೆ ಒಟ್ಟು ರೂ.192.79 ಕೋಟಿ ಬಿಡುಗಡೆ ಮಾಡಲಾಗಿರುತ್ತದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜು ಮತ್ತು ಸದಸ್ಯರುಗಳ ಅವವಧಿಯು ಅಂತ್ಯಗೊಂಡಿದ್ದರಿಂದ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷ ಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ 2019ರಲ್ಲಿ ಸಲ್ಲಿಸಿರುವುದಿಲ್ಲ. ನಂತರ 2020ರ ನವೆಂಬರ್ 23ರಂದು ನೇಮಕಗೊಂಡ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು , ಹೆಚ್.ಕಾಂತರಾಜ ನೇತೃತ್ವದ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಣಕೀಕರಣಗೊಳಿಸಿದ ದತ್ತಾಂಶಗಳನ್ನು ಉಪಯೋಗಿಸಿಕೊಂಡು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ನ್ನು ಸಿದ್ದಪಡಿಸಿ ಕಳೆದ ವರ್ಷ ಫೆಬ್ರವರಿ 29ರಂದು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಜಾತಿ ಗಣತಿ ವರದಿ ಬಗ್ಗೆ ಈ ತಿಂಗಳ 17 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಶಿಫಾರಸ್ಸುಗಳ ಜಾರಿ ಬಗ್ಗೆ ನಿರ್ಣಯ ತಗೆದುಕೊಳ್ಳಲಾಗುತ್ತದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
ಜಾತಿ ಗಣತಿ ಬಗ್ಗೆ ಆತುರದ ನಿರ್ಧಾರವಿಲ್ಲ- ಡಿಸಿಎಂ ಡಿಕೆಶಿ: ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಪ್ರಮುಖವಾಗಿ ಚರ್ಚೆಸಿದ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, "ಜಾತಿ ಗಣತಿ ವರದಿ ಜಾರಿ ಕುರಿತು ಸರ್ಕಾರ ಆತುರದ ತೀರ್ಮಾನ ಮಾಡುವುದಿಲ್ಲ" ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
"ಜಾತಿ ಗಣತಿ ಬಗ್ಗೆ ಸಂಪುಟ ಸಭೆಯಲ್ಲಿ ಕಾನೂನು ಸಚಿವರು ವರದಿ ತೆರೆದಿದ್ದು, ಯಾವುದೇ ಶಾಸಕರು ಹಾಗೂ ಸಚಿವರು ಇದುವರೆಗೆ ಇದನ್ನು ನೋಡಿಲ್ಲ" ಎಂದು ಹೇಳಿದ್ದಾರೆ.
ಜಾತಿ ಗಣತಿ ಕುರಿತು ಹಲವು ಸಚಿವರ ವಿರೋಧದ ಬಗ್ಗೆ ಗಮಸಸೆಳೆದಾಗ, "ಜಾತಿ ಗಣತಿ ವಿಚಾರವಾಗಿ ಯಾವುದೇ ಸಚಿವರ ವಿರೋಧವಿಲ್ಲ. ಯಾರೂ ಇದನ್ನು ಕಣ್ಣುಬಿಟ್ಟು ನೋಡಿಲ್ಲ" ಎಂದು ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ: ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಏ.17ರಂದು ಅಂತಿಮ ನಿರ್ಧಾರ - CASTE CENSUS REPORT