ETV Bharat / state

ಜಾತಿ ಗಣತಿ ಕುರಿತ ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಬೇಕಾಗಿದ್ದು, ಯಾವುದೇ ಆದೇಶ ನೀಡಲಾಗದು: ಹೈಕೋರ್ಟ್

author img

By ETV Bharat Karnataka Team

Published : Mar 5, 2024, 3:18 PM IST

ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಜಾತಿ ಗಣತಿ ಕುರಿತ ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದು, ಅಲ್ಲಿಯವರೆಗೂ ಯಾವುದೇ ರೀತಿಯ ಆದೇಶ ನೀಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.

karnataka-high-court-reaction-on-caste-census-report
karnataka-high-court-reaction-on-caste-census-report

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿ ಗಣತಿ ಕುರಿತ ಅರ್ಜಿಗಳ ಸುಧೀರ್ಘ ವಿಚಾರಣೆ ನಡೆಸಬೇಕಾದ ಅಗತ್ಯವಿದ್ದು, ಅಲ್ಲಿಯವರೆಗೂ ಯಾವುದೇ ರೀತಿಯ ಆದೇಶ ನೀಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014ರ ಜನವರಿ 23ರಂದು ಸರ್ಕಾರ ಆದೇಶಿಸಿರುವುದನ್ನು ವಜಾ ಮಾಡುವಂತೆ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ ಸೆಕ್ಷನ್ 9ಕ್ಕೆ ತಂದಿರುವ ತಿದ್ದುಪಡಿ ವಜಾ ಮಾಡುವಂತೆ ಕೋರಿ ಬೀದರ್​ನ ಶಿವರಾಜ್ ಕಣಶೆಟ್ಟಿ ಮತ್ತಿತರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದಿಂದ ವರದಿಯನ್ನು ಫೆಬ್ರವರಿ 29ಕ್ಕೆ ಸರ್ಕಾರ‌ ಸ್ವೀಕರಿಸಿದೆ. ಈ ವರದಿ ಕುರಿತಂತೆ ಸರ್ಕಾರ ಇನ್ನೂ ನಿರ್ಧಾರಕ್ಕೆ ಬರಬೇಕಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು. ಈ ವೇಳೆ ನ್ಯಾಯಪೀಠ, ಇದೇ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ಸಂಬಂಧ ಸರ್ಕಾರ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ತಿಳಿಸಿತು. ಇದಕ್ಕೆ ಅಡ್ವೋಕೆಟ್ ಜನರಲ್, ಒಂದು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯ ಮುಂದಿನ ವಿಚಾರಣೆವರೆಗೂ ವರದಿಗೆ ಸಂಬಂಧಿಸಿದಂತೆ ಯಾವುದೇ ಕ್ರಮಕ್ಕೆ ಮುಂದಾಗದಂತೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿಗಳ ಸಂಬಂಧ ಸುಧೀರ್ಘ ವಿಚಾರಣೆ ನಡೆಸಬೇಕಾಗಿದೆ. ಆದ್ದರಿಂದ ತಕ್ಷಣಕ್ಕೆ ಯಾವುದೇ ರೀತಿಯ ಆದೇಶವನ್ನು ನೀಡಲಾಗದು‌ ತಿಳಿಸಿ, ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

ಹಿನ್ನೆಲೆ ಏನು?: 2014ರ ಜನವರಿ 23 ರಂದು ರಾಜ್ಯ ಸರ್ಕಾರ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ( ಜಾತಿ ಗಣತಿ) ಮಾಡುವುದಕ್ಕೆ ಆದೇಶಿಸಿತ್ತು.‌ ಈ ಸಂಬಂಧ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಾಜ್ಯಾದ್ಯಂತ ಸಮೀಕ್ಷೆ ನಡೆಸಿತ್ತು. 2015ರ ಮೇ 5 ರಂದು ಸಮೀಕ್ಷೆ ಪೂರ್ಣಗೊಂಡಿತ್ತು. ಈ ನಡುವೆ ಜಾತಿ ಗಣತಿ ನಡೆಸುವ ಕುರಿತ ಪರ - ವಿರೋಧ ವ್ಯಕ್ತಪಡಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

2024ರ ಫೆಬ್ರವರಿ 29 ರಂದು ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಜಾತಿ ಗಣತಿ ಸಮೀಕ್ಷೆ ನಡೆಸಿರುವುದು ಕಾನೂನು ಬಾಹಿರ.‌ ಇದಕ್ಕೆ ಕೇಂದ್ರ ಸರ್ಕಾರಕ್ಕೆ ಮಾತ್ರ ಅವಕಾಶವಿದೆ. ಆದರೆ, ರಾಜ್ಯ ಸರ್ಕಾರ ನಡೆಸಿರುವ ಸಮೀಕ್ಷೆ ರದ್ದು ಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: ಪತಿಯ ಉಪಯೋಗಕ್ಕಾಗಿ ಆಗುವ ವೆಚ್ಚ ಪರಿಗಣಿಸಿ ಪತ್ನಿಗೆ ಜೀವನಾಂಶ ಕಡಿತಗೊಳಿಸಲಾಗದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.