ETV Bharat / state

ಹಾಸನ‌ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಬೆಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ - Hassan Pen Drive Case

author img

By ETV Bharat Karnataka Team

Published : Apr 29, 2024, 7:23 PM IST

karnataka-mahila-congress-protests-against-hasan-pen-drive-case
ಹಾಸನ‌ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಬೆಂಗಳೂರಲ್ಲಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಹಾಸನ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಬೆಂಗಳೂರು, ಹಾಸನ ಸೇರಿದಂತೆ ವಿವಿಧೆಡೆ ಪ್ರತಿಭಟನೆಗಳು ನಡೆದಿವೆ.

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ಆಗ್ರಹಿಸಿ ಇಂದು ಎಐಸಿಸಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಇದಕ್ಕೂ ಮುನ್ನ ಮಾತನಾಡಿದ ಅಲ್ಕಾ ಲಂಬಾ, ''ಹಾಸನದ ಪೆನ್ ಡ್ರೈವ್ ವಿಡಿಯೋ ಆರೋಪಿಯು ಇದುವರೆಗೂ ನಡೆದ ಎಲ್ಲಾ ಮಹಿಳಾ ದೌರ್ಜನ್ಯಗಳ ದಾಖಲೆಗ‌‍ಳನ್ನು ಮುರಿದು ಹಾಕಿದ್ದಾರೆ. ದೇಶದ ಪ್ರಧಾನಮಂತ್ರಿ ತಮ್ಮ ಪ್ರತಿ ಭಾಷಣದಲ್ಲಿಯೂ ಕುಟುಂಬ ರಾಜಕಾರಣ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಲೇ ಇರುತ್ತಾರೆ. ಅವರ ಮಾತಿಗೆ ಏನಾದರೂ ಅರ್ಥವಿದೆಯೇ? ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಜ್ವಲ್ ರೇವಣ್ಣ, ಬಿಜೆಪಿಯ ಕುಲ್ ದೀಪ್ ಸಿಂಗ್, ಉತ್ತರ ಪ್ರದೇಶದ ರಾಮ್ ದುಲ್ಹಾರೆ, ಬ್ರಿಜ್ ಭೂಷಣ್ ಸಿಂಗ್, ಹರಿಯಾಣದ ಸಚಿವ ಸಂದೀಪ್ ಸಿಂಗ್ ಇವರೆಲ್ಲಾ ಮಹಿಳೆಯರು, ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದವರು. ಇವರೇ ನಿಜವಾದ ಮೋದಿ ಪರಿವಾರದವರು. ಇದೇ ಮೋದಿ ಅವರ ಪರಿವಾರ ವಾದದ ಅರ್ಥ'' ಎಂದು ಟೀಕಿಸಿದರು.

''ಮೋದಿಯವರು ಮಾತೆತ್ತಿದರೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಜೊತೆ ನಿಂತು ಪ್ರಧಾನಿಗಳು ಫೋಟೋಗೆ ಪೋಸ್​​ ಕೊಡುತ್ತಾರೆ. ಆದರೆ ಭಾಷಣದಲ್ಲಿ ಮಾತ್ರ ಕುಟುಂಬ ರಾಜಕಾರಣ ಮತ್ತು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಾರೆ. ನಮ್ಮ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ತಿಳಿಸಬೇಕು. ಏಕೆಂದರೆ ಈ ಘಟನೆ ಬೆಳಕಿಗೆ ಬಂದ ತಕ್ಷಣ ಗಂಭೀರತೆ ಅರಿತು ಎಸ್ ಐಟಿ ರಚನೆಗೆ ಆದೇಶ ನೀಡಿದ್ದಾರೆ'' ಎಂದರು.

''ಸಾವಿರಾರು ವಿಡಿಯೋಗಳನ್ನು ಮಾಡಿದ್ದಾನೆ. ಕಾನೂನಿನ ಭಯವಿಲ್ಲದೆ ಕೃತ್ಯ ಎಸಗಿದ್ದಾನೆ. ಎಸ್ ಐಟಿಯಲ್ಲಿ ಮನವಿ ಮಾಡುತ್ತೇನೆ, ಶೋಷಣೆಗೆ ಒಳಗಾದ ಹೆಣ್ಣುಮಕ್ಕಳ ಗುರುತನ್ನು ಅದಷ್ಟು ಗುಪ್ತವಾಗಿ ಇರಿಸಿ ಹಾಗೂ ಅನ್ಯಾಯಕ್ಕೆ ಒಳಗಾದ ಎಲ್ಲಾ ಮಹಿಳೆಯರ ಪರವಾಗಿ ನಾವು ಇರುತ್ತೇವೆ. ನೀವು ಮುಂದೆ ಬಂದು ಆರೋಪಿ ತಪ್ಪಿಸಿಕೊಳ್ಳದಂತೆ ದೂರು ನೀಡಬೇಕು. ಪೊಲೀಸ್ ಠಾಣೆಗೆ ಬರಲು ಹೆದರಿಕೆಯಾದರೆ ಆನ್ ಲೈನ್ ಮೂಲಕ ದೂರು ದಾಖಲಿಸಿ'' ಎಂದು ಅಲ್ಕಾ ಲಂಬಾ ಆಗ್ರಹಿಸಿದರು.

ಹಾಸನದಲ್ಲೂ ಪ್ರತಿಭಟನೆ: ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ತನಿಖೆ ನಡೆಸಿ, ಮಹಿಳೆಯರನ್ನು ರಕ್ಷಣೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.

''ಕೆಲ ದಿನಗಳಿಂದ ಹಾಸನದಲ್ಲಿ ಪೆನ್ ಡ್ರೈವ್ ಮುಖಾಂತರ ಆಕ್ಷೇಪಾರ್ಹ ದೃಶ್ಯಗಳು ವಾಟ್ಸ್​ಆ್ಯಪ್​ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು, ಎಲ್ಲೆಡೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು'' ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

protest
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ: ಹಾಸನ ಪೆನ್ ಡ್ರೈವ್ ಪ್ರಕರಣವು ಮಹಿಳೆಯರಿಗೆ ಮಾಡಿರುವ ಅವಮಾನವಾಗಿದೆ. ಈ ಘಟನೆಯು ಅತ್ಯಂತ ಖಂಡನೀಯವಾಗಿದ್ದು, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ''ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಮಹಿಳಾ ವರ್ಗಕ್ಕೆ ರಕ್ಷಣೆ ಕೊಡುವಂತಹ ಕೆಲಸವಾಗಬೇಕಿದೆ'' ಎಂದು ನಲಪಾಡ್ ಆಗ್ರಹಿಸಿದರು.

''ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್​ಗೆ ಶಿಕ್ಷೆಯಾಗಬೇಕು. ಈ ರೀತಿಯಾದ ಕೃತ್ಯ ಮುಂದೆ ಜರುಗದಂತೆ ತನಿಖೆ ನಡೆಸಿ, ಸೂಕ್ತ ಕ್ರಮ ಜರುಗಿಸಬೇಕು'' ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಪೆನ್​ಡ್ರೈವ್​ ವಿಡಿಯೋ ಪ್ರಕರಣ, ಪ್ರಜ್ವಲ್​ ರೇವಣ್ಣ ಅಮಾನತು ವಿಚಾರ; ಕುಮಾರಸ್ವಾಮಿ ಹೇಳಿದ್ದೇನು? - H D Kumaraswamy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.