ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ ತಮ್ಮ ವಾದವನ್ನು ಮಂಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರತಿವಾದಿಯನ್ನಾಗಿಸಲು ಹೈಕೋರ್ಟ್ ಅನುಮತಿ ನೀಡಿದೆ.
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.
ಕುಮಾರಸ್ವಾಮಿ ಪರ ವಕೀಲರು, ಈ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಹೆಚ್ಡಿಕೆ ವಾದ ಪರಿಗಣಿಸಬೇಕೆಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅದರಂತೆ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಅವಕಾಶ ನೀಡಬೇಕು ಕೋರಿದರು.
ಅವರ ವಾದವನ್ನು ಮಾನ್ಯ ಮಾಡಿದ ನ್ಯಾಯಾಲಯವು ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಸೂಕ್ತ ತಿದ್ದುಪಡಿ ಮಾಡುವಂತೆ ಅರ್ಜಿದಾರರಾದ ಸಮಾಜ ಪರಿವರ್ತನಾ ಸಮುದಾಯ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆಯನ್ನು ಜೂ.10ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಸೇರಿ ಮತ್ತಿತರರು ಕೇತಗಾನಹಳ್ಳಿಯಲ್ಲಿ 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಈ ಅರ್ಜಿ ಪರಿಶೀಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಹೆಚ್ಡಿಕೆ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ ಸತ್ಯ ಹೇಳಿ: ಕುಮಾರಸ್ವಾಮಿ ಕಟು ಪ್ರಶ್ನೆ
ಇದನ್ನೂ ಓದಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಹೆಚ್ಡಿಕೆಗೆ ಸುಪ್ರೀಂಕೋರ್ಟ್ ಅವಕಾಶ