ETV Bharat / state

ಸೋಮಣ್ಣ ಲೋಕಸಭೆಗೆ ಸ್ಪರ್ಧಿಸುವ ಇಚ್ಛೆಗೆ ಯಾರ ಅಭ್ಯಂತರವೂ ಇಲ್ಲ: ವಿಜಯೇಂದ್ರ

author img

By ETV Bharat Karnataka Team

Published : Feb 2, 2024, 3:27 PM IST

Updated : Feb 2, 2024, 3:35 PM IST

ರಾಜ್ಯದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂಬ ನಿರ್ಧಾರವನ್ನು ಕೇಂದ್ರದ ವರಿಷ್ಠರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

BJP state president Vijayendra spoke to the media.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಧ್ಯಮದವರ ಜೊತೆ ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಧ್ಯಮದವರ ಜೊತೆ ಮಾತನಾಡಿದರು.

ತುಮಕೂರು: ಕೇಂದ್ರದ ವರಿಷ್ಠರು ಯಾವ ರೀತಿ ಒಪ್ಪಿಗೆ ಸೂಚಿಸುವರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮಾಜಿ ಸಚಿವ ವಿ ಸೋಮಣ್ಣ ಅವರು ಹಿರಿಯರಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಇದಕ್ಕೆ ಯಾರ ಅಭ್ಯಂತರವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಹಾಗೂ ಹಿರಿಯರು ಕುಳಿತು ಚರ್ಚೆ ನಡೆಸಿ ಈ ತೀರ್ಮಾನಕ್ಕೆ ಬರಲಿದ್ದಾರೆ. ರಾಜ್ಯದ ಯಾವ ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂಬ ನಿರ್ಧಾರವನ್ನು ಕೇಂದ್ರದ ವರಿಷ್ಠರು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ನಿರ್ಧಾರ ಮಾಡಲಿದ್ದಾರೆ ಎಂದರು.

ಜೆಡಿಎಸ್ ಬಿಜೆಪಿ ಮೈತ್ರಿ, ಶೀಘ್ರದಲ್ಲಿ ನಿರ್ಧಾರ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮೈತ್ರಿ ಹಿನ್ನೆಲೆ ಟಿಕೆಟ್ ಹಂಚಿಕೆ ಕುರಿತಂತೆ ಸದ್ಯದಲ್ಲಿಯೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ಅನೇಕ ಮಹಿಳಾಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳು ಪ್ರತಿಯೊಬ್ಬ ಮಹಿಳೆಯರಿಗೆ ತಲುಪಬೇಕು ಎಂಬ ಉದ್ದೇಶದಿಂದ ಬಿಜೆಪಿ ಪಕ್ಷದಿಂದ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಅಭಿಯಾನದ ಒಂದು ಭಾಗವಾಗಿ ತುಮಕೂರಿನಲ್ಲಿ ನಡೆಯುವ ಈ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧಡೆಯಿಂದ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಸೋಮಣ್ಣ ಮಿಂಚಿನ ಸಂಚಾರ : ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದೆರಡು ತಿಂಗಳಿನಿಂದ ಜಿಲ್ಲೆ ಹಾಗೂ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ಚುನಾವಣೆಯ ಅಖಾಡವನ್ನು ಅವರು ಸಜ್ಜುಗೊಳಿಸುತ್ತಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧವಾಗಿವೆ. ಈ ನಡುವೆ ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೂಡ ಸೋಮಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಜಿಲ್ಲೆಯ ಬಹುತೇಕ ಎಲ್ಲಾ ಸಮುದಾಯದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಲಿಂಗಾಯತ, ಗೊಲ್ಲ, ಒಕ್ಕಲಿಗ ಸಮುದಾಯದ ನಾಯಕರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ಪೂರ್ಣಗೊಳಿಸಿದ್ದಾರೆ. ರಾಜಕೀಯ ಮುಖಂಡರ ಮದುವೆ ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲೂ‌ ಕಾಣಿಸಿಕೊಳ್ಳುತ್ತಿದ್ದಾರೆ.

ಗುಬ್ಬಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ವೇಳೆ ಹಾಲಿ ತುಮಕೂರು ಸಂಸದ ಜಿ.ಎಸ್.ಬಸವರಾಜು ಸಾಥ್ ನೀಡಿರುವುದು ಕೂಡ ಲೋಕಸಭಾ ಚುನಾವಣೆಯಲ್ಲಿ ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಪುಷ್ಠಿ ನೀಡಿದಂತಿದೆ.

ಈ ಹಿಂದೆಯೂ ಕೂಡ ಹಾಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ಹೈಕಮಾಂಡ್ ಬಳಿ ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು. ಇದಕ್ಕೆ ನಾವು ಸಂಪೂರ್ಣ ರೀತಿಯಲ್ಲಿ ಸಹಕಾರ ನೀಡುತ್ತೇವೆ ಎಂಬ ಇಂಗಿತ ವ್ಯಕ್ತಪಡಿಸಿದ್ದರು.

ಇದನ್ನೂಓದಿ:ತಂತ್ರಜ್ಞಾನ, ಸಂಶೋಧನೆಗೆ ₹1 ಲಕ್ಷ ಕೋಟಿ ಬಜೆಟ್, ಬೆಂಗಳೂರಿಗೆ ಹೆಚ್ಚು ಲಾಭ: ತೇಜಸ್ವಿ ಸೂರ್ಯ

Last Updated : Feb 2, 2024, 3:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.