ETV Bharat / state

ಪ್ರೀಮಿಯಂ ಎಫ್ಎಆರ್ ಖರೀದಿಸಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ಅಂಗೀಕಾರ

author img

By ETV Bharat Karnataka Team

Published : Feb 21, 2024, 7:20 AM IST

many-bills-presented-in-assembly-session
ಪ್ರೀಮಿಯಂ ಎಫ್ಎಆರ್ ಖರೀದಿಸಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ಅಂಗೀಕಾರ

ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಬೆಂಗಳೂರು: ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ನಿವೇಶನ ಮಾರ್ಗಸೂಚಿ ದರದ ಶೇ.40ರಷ್ಟು ಶುಲ್ಕ ಪಾವತಿಸುವ ಮೂಲಕ ಪ್ರೀಮಿಯಂ ನೆಲ ವಿಸ್ತೀರ್ಣ ಅನುಪಾತವನ್ನು (ಪ್ರೀಮಿಯಂ ಎಫ್​ಎಆರ್​​) ಖರೀದಿಸಿ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸುವ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ - 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್​ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು​ ಈ ತಿದ್ದುಪಡಿ ಮಸೂದೆ ಮಂಡಿಸಿದರು. ವಿಪಕ್ಷ ಸದಸ್ಯರ ಪ್ರತಿಭಟನೆಯ ಮಧ್ಯೆಯೇ ಮಸೂದೆಗೆ ಒಪ್ಪಿಗೆಯನ್ನೂ ಪಡೆಯಲಾಯಿತು.

ಕಟ್ಟಡ ನಿರ್ಮಿಸುವವರು ಪ್ರೀಮಿಯಂ ಎಫ್​ಎಆರ್​​ಗಳನ್ನು ಖರೀದಿಸಿ, ಕಟ್ಟಡದ ನಿವೇಶನದ ಅಳತೆಗೆ ನಿಗದಿಪಡಿಸಿದ ಎಫ್​ಎಆರ್​​ಗಿಂತ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿಕೊಳ್ಳಬಹುದು. ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ಸಕ್ಷಮ ಪ್ರಾಧಿಕಾರದ ಅನುಮೋದಿತ ಮಾಸ್ಟರ್​ ಪ್ಲಾನ್​​ನ ವಲಯ ನಿಯಮಗಳ ಅನ್ವಯವೇ ಪ್ರೀಮಿಯಂ ಎಫ್​ಎಆರ್​ಗೆ ಅನುಮತಿ ನೀಡಬೇಕು ಎಂದು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರೀಮಿಯಂ ಎಫ್​ಎಆರ್ ಮಾರಾಟದಿಂದ ಸಂಗ್ರಹವಾಗುವ ಶುಲ್ಕವನ್ನು ಭೂಸ್ವಾಧೀನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಟಿಡಿಆರ್​​ ಬಳಸಿ ನಿರ್ಮಿಸಿರುವ ಕಟ್ಟಡದ ಎಫ್​ಎಆರ್​​ ಮಿತಿಯು ಶೇ.0.6ರಷ್ಟು ಅಥವಾ ಶೇ.60ರಷ್ಟು ಮೀರುವಂತಿಲ್ಲ. ಪ್ರೀಮಿಯಂ ಎಫ್​ಎಆರ್ ಮಿತಿಯನ್ನು ಶೇ.4ಕ್ಕೆ ನಿಗದಿಪಡಿಸಲಾಗಿದೆ.

ಬಿಲ್ಡರ್​ಗಳಿಗೆ ಅನುಕೂಲಕರ ಎಂದ ಬೊಮ್ಮಾಯಿ: ''ಬಿಲ್ಡರ್​​ಗಳಿಗೆ ಲಾಭ ಮಾಡಿಕೊಡಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದು ಶ್ರೀಮಂತ ಬಿಲ್ಡರ್​ಗಳ ಪರವಾಗಿದೆ. ಇದರಿಂದ ನಗರಗಳು ಯೋಜನಾಬದ್ಧವಾಗಿ ಬೆಳೆಯುವುದಿಲ್ಲ. ಪ್ರೀಮಿಯಂ ಎಫ್​ಎಆರ್​ಗಳನ್ನು ಸರ್ಕಾರವೇ ಮಾರಾಟ ಮಾಡಿದರೆ, ಟಿಡಿಆರ್​​ ಖರೀದಿಗೆ ಯಾರೂ ಮುಂದೆ ಬರುವುದಿಲ್ಲ. ಈ ತಿದ್ದುಪಡಿ ವಿಧೇಯಕವನ್ನು ಕೈಬಿಡಬೇಕು'' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಇತರ ಹಲವು ವಿಧೇಯಕ ಮಂಡನೆ: ಮಂಗಳವಾರ ವಿಧಾನಸಭೆಯಲ್ಲಿ 2024ನೇ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್, 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಮ ) (ಕರ್ನಾಟಕ ತಿದ್ದುಪಡಿ) ವಿಧೇಯಕ ಮತ್ತು 2024ನೇ ಅಂತರ್ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಡಿಸಿದರು.

2024ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ (ತಿದ್ದುಪಡಿ) ವಿಧೇಯಕವನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, 2024ನೇ ಸಾಲಿನ ಗದಗ ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರದ ವಿಧೇಯಕವನ್ನು ಹಜ್ ಸಚಿವ ರಹೀಮ್ ಖಾನ್ ಹಾಗೂ 2024ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆ ಕಲಾಪದಲ್ಲಿ ಮಂಡನೆ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.