ETV Bharat / state

ಮಂಗನ ಕಾಯಿಲೆ ನಿಯಂತ್ರಣ ಕುರಿತು ಮಲೆನಾಡು ಶಾಸಕರೊಂದಿಗೆ ಸಚಿವ ಗುಂಡೂರಾವ್ ಸಭೆ

author img

By ETV Bharat Karnataka Team

Published : Feb 19, 2024, 10:04 PM IST

ಮಂಗನ ಕಾಯಿಲೆ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಹತ್ವದ ಸಭೆ ನಡೆಸಿದರು.

kfd disease
ಮಂಗನ ಕಾಯಿಲೆ ನಿಯಂತ್ರಣ ಕುರಿತು ಮಲೆನಾಡು ಶಾಸಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭ

ಬೆಂಗಳೂರು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಪಡೆದುಕೊಂಡರು. ರೋಗ ಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಸಚಿವರು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಕೆಎಫ್​​ಡಿ ಪಾಸಿಟಿವ್ ಬಂದವರಿಗೆ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.‌ ಶಿರಸಿಯಲ್ಲಿ ಕೆಎಫ್​ಡಿ ಟೆಸ್ಟಿಂಗ್​​ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು.

kfd disease meeting
ಸಚಿವ ದಿನೇಶ್ ಗುಂಡೂರಾವ್ ಸಭೆ

ರಾಜ್ಯದಲ್ಲಿ ಸದ್ಯ 103 ಮಂಗನ ಕಾಯಿಲೆ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವ್‌ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಮಂಗನ ಕಾಯಿಲೆಯಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ. ಮರಣ ಪ್ರಮಾಣ ತಗ್ಗಿಸಲು ಆಯಾ ಜಿಲ್ಲೆಗಳ ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ ನೀಡಲಾಗಿದೆ. ರಾಜ್ಯದಲ್ಲಿ ಕೆಎಫ್‌ಡಿ ಪರೀಕ್ಷೆ, ಪಾಸಿಟಿವ್‌, ಮರಣ, ಡಿಸ್ಚಾರ್ಜ್‌ ಕುರಿತಾಗಿ ದೈನಂದಿನ ಬುಲೆಟಿನ್‌ ಹೊರಡಿಸಲಾಗುತ್ತಿದೆ. ವಿಡಿಎಲ್ ಶಿವಮೊಗ್ಗ ಮತ್ತು ಎಂಐವಿ ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು ಕೆಎಫ್​ಡಿ ಪರೀಕ್ಷೆಗೆ ಗುರುತಿಸಲಾಗಿದೆ. ಶೀಘ್ರ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಕಳೆದ 1 ತಿಂಗಳಿನಿಂದ ಮಂಗನ ಕಾಯಿಲೆಗೆ ಲಸಿಕೆ ನೀಡಲಾಗುತ್ತಿದ್ದು, ಮುಂದಿನ 2 ತಿಂಗಳಿಗೆ ಆಗುವಷ್ಟು ಲಸಿಕೆ ಲಭ್ಯವಿದೆ. ಶಿರಸಿ ಹಾಗೂ ಸಾಗರದಲ್ಲಿ ಮಂಗನ ಕಾಯಿಲೆ ಪತ್ತೆಹಚ್ಚಲು ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ ಹಾಗೂ ಮಂಗನ ಕಾಯಿಲೆಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ICMR ಜೊತೆ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯವಾಗಲಿದೆ ಎಂದರು.

ಮಂಗನ ಕಾಯಿಲೆಯ ತ್ವರಿತ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ಗಳ ಹೆಚ್ಚಳ ಮಾಡಲಾಗುವುದು. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ಮೂಲಕ ಮಂಗನ ಕಾಯಿಲೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಮಂಕಾಳ ಎಸ್‌. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಹೆಚ್‌.ಡಿ. ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನ ಮೋಟಮ್ಮ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಮತ್ತೆ ನಾಲ್ಕು ಮಂಗನ ಕಾಯಿಲೆ ಪ್ರಕರಣಗಳು ಪತ್ತೆ: ಜನರಲ್ಲಿ ಹೆಚ್ಚಿದ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.