ಬೆಳಗಾವಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವೆಲ್ಲರೂ ಬದ್ಧ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದರು.
ಈ ಕುರಿತು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ಈಗಾಗಲೇ ನಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಹ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಒಮ್ಮತದ ಬೆಂಬಲ ಕೊಡುವುದಾಗಿ ಹೇಳಿದ್ದಾರೆ. ಹಾಗಾಗಿ, ನಮಗೆ ಮೊದಲು ದೇಶ ಮುಖ್ಯ. ಪಾಕಿಸ್ತಾನದವರು ಪ್ರಚೋದಿಸುವ ಕೆಲಸ ಮಾಡಿದ್ದು, ಖಂಡನೀಯ ಎಂದು ಕಿಡಿಕಾರಿದರು.
ದೇಶದಲ್ಲಿ ಇಂಥ ಘಟನೆಗಳು ಆಗಬಾರದು. ಇಂಥ ಘಟನೆಗಳು ಸಂಭವಿಸಿದಾಗ ಖಂಡಿಸಬೇಕಿತ್ತು. ಇದನ್ನು ಖಂಡಿಸಿರುವ ಕೇಂದ್ರ ಸರ್ಕಾರ ಭಯೋತ್ಪಾದಕರ ಮೇಲೆ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ನೀಡಿದ ಹೇಳಿಕೆಗೆ ಅವರೇ ನಿನ್ನೆ ಉತ್ತರ ಕೊಟ್ಟಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ನಾವು ಪ್ರತಿಭಟಿಸುತ್ತಿದ್ದೇವೆ. ಕೇಂದ್ರವು ಎಲ್ಲದರ ಮೇಲೂ ಬೆಲೆ ಏರಿಕೆ ಮಾಡಿದೆ. ಇದರ ಅವಶ್ಯಕತೆ ಏನಿದೆ?. ಇದರ ಹಣ ಎಲ್ಲಿ ಹೋಗುತ್ತಿದೆ ಎಂದು ಕಾರಣ ಕೊಡಬೇಕು. ರಾಷ್ಟ್ರದ ಹಿತ ದೃಷ್ಟಿಯಿಂದ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಜೋಳ ಕೊಡುವ ಪ್ರಸ್ತಾವನೆ ಕಳುಹಿಸಲಾಗಿದೆ : ಉತ್ತರ ಕರ್ನಾಟಕದ ಪಡಿತರದಾರರಿಗೆ ಜೋಳ ಕೊಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಅಕ್ಕಿ ಹೆಚ್ಚು ಉಪಯೋಗಿಸದ ಪ್ರದೇಶದಲ್ಲಿ ಮೂರು ಕೆ. ಜಿ. ಜೋಳ ಕೊಡುವ ಪ್ರಸ್ತಾವನೆ ಕಳುಹಿಸಲಾಗಿದೆ. ರಾಜ್ಯದಲ್ಲಿ ಬಡವರು ಉಪವಾಸದಿಂದ ಇರಬಾರದು ಎಂದು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಬಡವರಿಗೆ ದವಸ ಧಾನ್ಯಗಳನ್ನು ನೀಡಬೇಕು ಹಾಗೂ ನರೇಗಾ ಯೋಜನೆಯಲ್ಲಿ ಉದ್ಯೋಗ ಕೊಡಬೇಕು ಎಂಬುದು ನಮ್ಮ ಮುಖ್ಯ ಯೋಜನೆ ಆಗಿದೆ ಎಂದು ಹೇಳಿದರು.
ಇದನ್ನೂ ಓದಿ : ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಅಂತ ಹೇಳಿದ್ದೇನೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ - CM SIDDARAMAIAH