ಮಂಗಳೂರು: ಅಪ್ರಾಪ್ತ ಬಾಲಕಿಯರ ಅತ್ಯಾಚಾರ, ಕೊಲೆ ಹಾಗೂ ಆನೆ ಮಾವುತ ಪ್ರಕರಣಗಳನ್ನು ನ್ಯಾಯಾಂಗ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿ ನೋಟ ಅಭಿಯಾನ ನಡೆಸಲು ನಿರ್ಧರಿಸಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಹೋರಾಟ ಸಮಿತಿಯ ಮುಖಂಡ ಗಿರೀಶ್ ಮಟ್ಟನ್ನನವರ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದೆ. ಹೋರಾಟಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದೇವೆ ಎಂದರು.
ಧರ್ಮಸ್ಥಳದಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣ ಮಾತ್ರವಲ್ಲ, ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಮಹಿಳೆಯ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜತೆಗೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ದ.ಕ ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಏ. 24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಈ ವೇಳೆ ಪ್ರಸನ್ನ ರವಿ, ತಮ್ಮಣ್ಣ ಶೆಟ್ಟಿ, ಜಯನ್ ಇದ್ದರು.
ಇದನ್ನೂ ಓದಿ: ಚುನಾವಣೆಯ ಪ್ಲೈಯಿಂಗ್ ಸ್ಕ್ವಾಡ್ ವಾಹನಕ್ಕೆ ಕೆಕೆಆರ್ಟಿಸಿ ಬಸ್ ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ - BUS ACCIDENT