ETV Bharat / state

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸೊಮೊಟೊ ಪ್ರಕರಣ ದಾಖಲು

author img

By ETV Bharat Karnataka Team

Published : Feb 27, 2024, 10:27 PM IST

Updated : Feb 27, 2024, 11:09 PM IST

ರಾಜ್ಯಸಭಾ ಚುನಾವಣೆಯ ಫಲಿತಾಂಶದ ನಂತರ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದಿದ್ದು, ವಿಧಾನಸೌಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Eಪಾಕಿಸ್ತಾನ ಪರ ಘೋಷಣೆ: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸೇರಿ ಬೆಂಬಲಿಗರ ವಿರುದ್ಧ ಬಿಜೆಪಿ ದೂರು
ಪಾಕಿಸ್ತಾನ ಪರ ಘೋಷಣೆ: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸೇರಿ ಬೆಂಬಲಿಗರ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ವಿಜಯೋತ್ಸವದ ವೇಳೆ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ವಿಧಾನಸೌಧ ಭದ್ರತಾ ವಿಭಾಗದ ಎಸಿಪಿ ಶಿವಕುಮಾರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

"ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಡಾ.ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಸಂಜೆ 6ರಿಂದ 6:30ರ ಸುಮಾರಿಗೆ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಸಂಬಂಧ ಲಭ್ಯವಿರುವ ಫೂಟೇಜ್​ಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ" ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ವಿಡಿಯೋ ಫೂಟೇಜ್​ನಲ್ಲಿ ಆಡಿಯೋ ಅಸ್ಪಷ್ಟವಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯೋ ಅಥವಾ ನಾಸಿರ್​ ಸರ್ ಜಿಂದಾಬಾದ್ ಘೋಷಣೆಯೂ ಸ್ಪಷ್ಟವಾಗಿಲ್ಲ. ಸದ್ಯ ಸೊಮೊಟೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಡಿಯೋ ಸಂಗ್ರಹಿಸಿ ಎಫ್​ಎಸ್​ಎಲ್ ಕಳುಹಿಸಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ ಘೋಷಣೆ ಕೂಗಿದ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಬಿಜೆಪಿ ನಿಯೋಗದಿಂದ ದೂರು: ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಾಸೀರ್ ಹುಸೇನ್ ಹಾಗೂ ಬೆಂಬಲಿಗರ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ.

ಬಳಿಕ ಮಾತನಾಡಿದ‌ ಆರ್.ಅಶೋಕ್, "ವಿಧಾನಸೌಧದ ಮೇಲೆ ಇವರು ಪಾಕಿಸ್ತಾನ ಬಾವುಟ ಹಾರಿಸುವ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಶಕ್ತಿಸೌಧದ ಒಳಗೆ ಈ ರೀತಿಯವರು ಎಷ್ಟು ಜನ ಅಡಗಿದ್ದಾರೋ?. ಮುಂಬೈ ತಾಜ್ ಹೋಟೆಲ್​ನಲ್ಲಿ ಆದಂತಹ ಭಯ ನನಗೆ ಆಗುತ್ತಿದೆ. ಪೊಲೀಸರು ಕೈ ಕಟ್ಟಿ ನಿಂತುಕೊಂಡಿದ್ದಾರೆ. ಪಿಎಫ್​ಐ ಸೇರಿದಂತೆ ದೇಶದ್ರೋಹಿಗಳ ವಿರುದ್ಧದ 1,200 ಪ್ರಕರಣಗಳನ್ನು​ ಈ ಸರ್ಕಾರ ವಾಪಸ್ ತೆಗೆದುಕೊಂಡಿದೆ. ಪೊಲೀಸರು ಪ್ರಶ್ನೆ ಮಾಡಿದರೆ ವರ್ಗಾವಣೆ ಮಾಡುತ್ತಾರೆ ಅಂತಾ ಭಯಗೊಂಡಿದ್ದಾರೆ".

"ಏಳೂವರೆ ಕೋಟಿ ಜನರ ಪವಿತ್ರ ಕ್ಷೇತ್ರದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ. ಕಾಂಗ್ರೆಸ್‌ನವರು ಮಜಾ ಮಾಡ್ತಿದ್ದಾರೆ. ಇಂಥ ನಾಲಾಯಕ್ ಸರ್ಕಾರ ಯಾವುದೂ ಇಲ್ಲ. ಸಂವಿಧಾನ ಜಾಥಾ ಮಾಡ್ಕೊಂಡು ಓಡಾಡಿದರು. ಪಾಕಿಸ್ತಾನ ಜಿಂದಾಬಾದ್ ಎಂಬವರ ಕೈಗೆ ಸಂವಿಧಾನ ಕೊಡಬೇಕಾ? ಈ ಹಿಂದೆ ಸಂಸದ ಡಿ.ಕೆ.ಸುರೇಶ್ ದೇಶ ಒಡೆಯುವ ಹೇಳಿಕೆ ಕೊಟ್ಟಿದ್ದರು. ‌ಇವತ್ತಿನ ದೇಶ ವಿರೋಧಿ ಹೇಳಿಕೆಗೆ ಅದು ಸಿಂಕ್ ಆಗ್ತಿದೆ" ಎಂದು ಹೇಳಿದರು.

ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ: ಘಟನೆ ಸಂಬಂಧ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಂದಾದರು. ಬಳಿಕ ಪಕ್ಷದ ಕಚೇರಿಯೆದುರು ಧರಣಿ ನಡೆಸಿದರು. ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನಕ್ಕೆ ಅವಕಾಶ ನೀಡದ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಿದರು. ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಕರೆ ಕೊಟ್ಟಿದ್ದಾರೆ.

ಪ್ರಹ್ಲಾದ್​ ಜೋಶಿ ಹೇಳಿಕೆ: "ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ನಾಸೀರ್ ಹುಸೇನ್ ಅವರ ವಿಜಯೋತ್ಸವದ ವೇಳೆ ಬೆಂಬಲಿಗರು ವಿಧಾನಸೌಧದೊಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು‌ ಅತ್ಯಂತ ಖಂಡನೀಯ. ಘೋಷಣೆ ಕೂಗಿದವರನ್ನು ಸರ್ಕಾರ ಬಂಧಿಸಬೇಕು" ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.

ಬೊಮ್ಮಾಯಿ ಹೇಳಿಕೆ: 'ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕ್​ ಪರ ಘೋಷಣೆ ಕೂಗಿದ್ದಾರೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ತಪ್ಪಿಸ್ಥರನ್ನು ಬಂಧಿಸಿ‌ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಸಾಮಾಜಿಕ ಜಾಲತಾಣ 'ಎಕ್ಸ್'​ ಮೂಲಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ ಡಿ.ಕೆ.ಶಿವಕುಮಾರ್‌

Last Updated : Feb 27, 2024, 11:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.