ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಗೆದ್ದ ಬಳಿಕ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮೃತಪಟ್ಟವರ ಪರವಾಗಿ ಸೇರಿದಂತೆ ಹಲವು ಮಂದಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಪರಿಗಣಿಸಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಮಂಗಳವಾರ ಕಲಾಪ ಪ್ರಾರಂಭಿಸುತ್ತಿದ್ದಂತೆ, ಮೃತರ ಪರವಾಗಿ ಸೇರಿ ಕೆಲವು ವಕೀಲರು ಮಧ್ಯಂತರ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಉದ್ದೇಶಿಸಿದ ಪೀಠ, ಈವರೆಗೂ ವಸ್ತುಸ್ಥಿತಿ ವರದಿಯನ್ನು ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಶೆಟ್ಟಿ ಅವರು, ಘಟನೆ ಸಂಬಂಧ ನ್ಯಾಯಾಂಗ ತನಿಖೆ, ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲಾಗಿದೆ. ತನಿಖಾ ವರದಿ ಬರಬೇಕಾಗಿದೆ. ವರದಿ ಬರುವುದಕ್ಕೂ ಮುನ್ನ ನ್ಯಾಯಾಲಯಕ್ಕೆ ಸಲ್ಲಿಸಿದಲ್ಲಿ ತನಿಖೆಗೂ ಮುನ್ನ ಸರ್ಕಾರ ತೀರ್ಮಾನ ಮಾಡಿದೆ ಎಂಬ ಆರೋಪ ಬರಲಿದೆ. ಆದ್ದರಿಂದ ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದನ್ನ ಪರಿಗಣಿಸಿದ ಪೀಠ, ನಿಮ್ಮ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರ್ಕಾರ ಸಲ್ಲಿಸುವ ವರದಿಯನ್ನು ಪರಿಗಣಿಸಿ ಮಧ್ಯಂತರ ಅರ್ಜಿಗಳ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜೂನ್ 12ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿ ಮುಂದೂಡಿತು.
ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ವಿಜಯೋತ್ಸವವನ್ನು ಯಾವಾಗ ಮತ್ತು ಯಾರು, ಯಾವ ರೀತಿಯಲ್ಲಿ ನಡೆಸಲು ನಿರ್ಧರಿಸಿದರು?. ಸಂಚಾರ ನಿಯಂತ್ರಣಕ್ಕೆ ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು?. ಸಾರ್ವಜನಿಕರು, ಜನಸಂದಣಿ ನಿಯಂತ್ರಿಸಲು ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು?. ಸ್ಥಳದಲ್ಲಿ ಯಾವ ವೈದ್ಯಕೀಯ ಮತ್ತು ಇತರ ಸೌಲಭ್ಯ ವ್ಯವಸ್ಥೆ ಮಾಡಲಾಗಿತ್ತು?. ಆಚರಣೆಗಳ ಸಮಯದಲ್ಲಿ ಎಷ್ಟು ಜನರು ಪಾಲ್ಗೊಳ್ಳಬಹುದು ಎಂಬ ಬಗ್ಗೆ ಮುಂಚಿತವಾಗಿ ಯಾವುದೇ ಮೌಲ್ಯಮಾಪನ ಮಾಡಲಾಗಿತ್ತೆ?. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿ ವೈದ್ಯಕೀಯ ತಜ್ಞರು ತಕ್ಷಣವೇ ಚಿಕಿತ್ಸೆ ನೀಡಿದ್ದಾರೆಯೇ? ಇಲ್ಲದಿದ್ದರೆ ಏಕೆ?. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಎಷ್ಟು ಸಮಯ ಹಿಡಿಯಿತು?. ಯಾವುದೇ ಕ್ರೀಡಾಕೂಟ ಮತ್ತು ಈ ರೀತಿಯ ಆಚರಣೆಗಳಲ್ಲಿ 50 ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಜನಸಂದಣಿಯನ್ನು ನಿರ್ವಹಿಸಲು ಯಾವುದೇ ಎಸ್ಒಪಿ ರೂಪಿಸಲಾಗಿದೆಯೇ?. ಕಾರ್ಯಕ್ರಮ ಆಯೋಜಿಸಲು ಅನುಮತಿ ಕೋರಲಾಗಿತ್ತೇ? ಎಂಬ ಪ್ರಶ್ನೆಗಳಿಗೆ ಉತ್ತರ ನೀಡಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚನೆ ನೀಡಿತ್ತು.
ಪ್ರಕರಣ : 18 ವರ್ಷಗಳ ಬಳಿಕ ಐಪಿಎಲ್ನಲ್ಲಿ ಆರ್ಸಿಬಿ ಗೆಲುವು ಸಾಧಿಸಿದ ಬಳಿಕ ನಗರದಲ್ಲಿ ವಿಜಯೋತ್ಸವ ಆಚರಣೆಗೆ ಫ್ರಾಂಚೈಸಿ ಮತ್ತು ಸರ್ಕಾರ ತೀರ್ಮಾನ ಕೈಗೊಂಡಿತ್ತು. ವಿಜಯೋತ್ಸವಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯ ವ್ಯವಸ್ಥೆ ಕಲ್ಪಿಸದೆ ಲಕ್ಷಾಂತರ ಜನ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧಕ್ಕೆ ಬಂದ ಹಿನ್ನೆಲೆಯಲ್ಲಿ ತಳ್ಳಾಟದಿಂದ ಕ್ರೀಡಾಂಗಣದ 6 ಮತ್ತು 7ನೇ ಗೇಟ್ನಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.