ತುಮಕೂರು: ನಗರದ ಹೊರವಲಯದ ನಂದಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ರಾಜೇಶ್ (25), ಧನಂಜಯ (27) ಹಾಗೂ ಧನುಷ್ (23) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ, ಸಮೀಪದ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದಂತೆ ಎದುರಿಗೆ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮೃತಪಟ್ಟಿರುವ ಮೂವರು ದಾಬಸ್ ಪೇಟೆಯ ಸೋಲಾರ್ ಕಂಪನಿಯೊಂದರಲ್ಲಿ ಗಾರ್ಡ್ಗಳಾಗಿ ಕೆಲಸ ಮಾಡುತ್ತಿದ್ದರು. ನೈಟ್ ಶಿಫ್ಟ್ ಕೆಲಸ ಮುಗಿಸಿಕೊಂಡು ಬೆಳಗಿನ ಜಾವ ವಾಪಸ್ ತುಮಕೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ: ಕಾರಿಗೆ ಖಾಸಗಿ ಬಸ್ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ