ETV Bharat / state

ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್​ದಿಂದ ಸಂಸ್ಕರಿಸಿದ ನೀರು ಪೂರೈಕೆ: ರಾಮ್‌ ಪ್ರಸಾತ್‌ ಮನೋಹರ್‌ - Water board meeting

author img

By ETV Bharat Karnataka Team

Published : Apr 6, 2024, 7:38 PM IST

ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಶನಿವಾರ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಯಿತು.

meeting was held at Jalamandali head office
ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು.

ಬೆಂಗಳೂರು: ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್​​​ದಿಂದ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಶನಿವಾರ ಕೈಗಾರಿಕೋದ್ಯಮಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 1,480 ಎಂಎಲ್​​ಡಿ ತ್ಯಾಜ್ಯ ನೀರು ಉತ್ಪಾದನೆ ಆಗುತ್ತದೆ. ಪ್ರಸ್ತುತ 1,212 ಎಂಎಲ್​​ಡಿ ನೀರನ್ನು ಶುದ್ಧೀಕರಿಸಲಾಗುತ್ತಿದೆ. ಇದರ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಗುರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯೇಕ ಪೈಪ್‌ ಲೈನ್‌ ಮೂಲಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಇದು ದೇಶದಲ್ಲೇ ಮೊದಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದಲ್ಲಿರುವಂತಹ ಕೈಗಾರಿಕೆಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ನೀರು ಪೂರೈಸಲು ಜಲಮಂಡಳಿ ಸಿದ್ದವಿದೆ. ಅದರಲ್ಲಿಯೂ ಜಲಮಂಡಳಿ ಬಳಿ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರು ಲಭ್ಯವಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪ್ರಮಾಣೀಕೃತವಾದ ಸಂಸ್ಕರಿಸಿದ ನೀರನ್ನು ಕುಡಿಯಲು ಹೊರತುಪಡಿಸಿ ಸ್ವಚ್ಛತೆ ಸೇರಿದಂತೆ ಬಹಳಷ್ಟು ಕಾರ್ಯಗಳಿಗೆ ಉಪಯೋಗಿಸಬಹುದಾಗಿದೆ. ಅದರ ಬಳಕೆಯನ್ನು ನಿಮ್ಮ ಪ್ರದೇಶದಲ್ಲಿ ಹೆಚ್ಚಿಸುವ ಅಗತ್ಯವಿದ್ದು, ಕೈಗಾರಿಕಾ ಸಂಸ್ಥೆಗಳು ಇದರ ಬಗ್ಗೆ ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.

ಈ ಸಮಯದಲ್ಲಿ ನೀರಿನ ಉಳಿತಾಯ ಮಾಡುವಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು, ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು. ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮಾಡಿಕೊಳ್ಳುವುದು, ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ಈ ಎಲ್ಲಾ ಹೊಸ ಅನುಷ್ಠಾನಗಳ ಬಗ್ಗೆ ಬಳಕೆದಾರರಿಗೆ ಮಾಹಿತಿಯನ್ನು ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದು ಸೇರಿದಂತೆ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನಾಂದೋಲನದಲ್ಲಿ ಭಾಗಿಯಾಗುವುದಾಗಿ ಕೈಗಾರಿಕೋದ್ಯಮಿಗಳು ತಿಳಿಸಿದರು.

ಅಂತರ್ಜಲ ಕುಸಿತದಿಂದ ಎದುರಾಗಿರುವ ನೀರಿನ ಕೊರತೆ ಸಮಯದಲ್ಲೂ ಪೀಣ್ಯ ಸೇರಿದಂತೆ ನಗರದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಸಮರ್ಪಕವಾಗಿ ನೀರು ಪೂರೈಸುತ್ತಿರುವ ಜಲಮಂಡಳಿಯ ಶ್ರಮ ಪ್ರಶಂಸನೀಯ. ಇರುವಂತಹ ಕೈಗಾರಿಕೆಗಳಿಗೆ ಸಮರ್ಪಕ ರೀತಿಯಲ್ಲಿ ನೀರಿನ ಲಭ್ಯತೆಯನ್ನು ಒದಗಿಸಲಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ತಿಳಿಸಿದರು.

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಹೆಚ್‌ ಎಂ ಆರಿಫ್‌ ಮಾತನಾಡಿ, ನಮ್ಮಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿವೆ. ಮಾರ್ಚ್‌ ತಿಂಗಳ ಮೊದಲ ವಾರದಲ್ಲೇ ಜಲಮಂಡಳಿ ಅಧಿಕಾರಿಗಳು ಪೀಣ್ಯ ಕೈಗಾರಿಕಾ ಸಂಘದ ಜೊತೆ ಸಭೆ ನಡೆಸಿ ಅಗತ್ಯ ಪೂರೈಕೆಗೆ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದರು.

ಸಭೆಯಲ್ಲಿ ಹಲವು ಕೈಗಾರಿಕೋದ್ಯಮಿಗಳು, ಪೀಣ್ಯ ಕೈಗಾರಿಕಾ ಸಂಸ್ಥೆ, ಎಫ್‌ಕೆಸಿಸಿಐ, ಕಾಸಿಯಾ ಪದಾಧಿಕಾರಿಗಳು, ಎಂಎಸ್‌ಎಂಇ ನಿರ್ದೇಶಕ ಡಾ. ವಿಜಯಮಹಾಂತೇಶ್‌, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕ ಕುಮಾರ್‌ ಅವರು ಉಪಸ್ಥಿತರಿದ್ದರು.

ಇದನ್ನೂಓದಿ:ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ಧ ಕ್ರಮ: ಜಲಮಂಡಳಿ ಅಧ್ಯಕ್ಷ - Bengaluru water board

ETV Bharat Logo

Copyright © 2024 Ushodaya Enterprises Pvt. Ltd., All Rights Reserved.