ETV Bharat / state

ನಮಗೆ ವಿಷನ್ ಚಿಂತೆ, ಕಾಂಗ್ರೆಸ್​ಗೆ ಕಮಿಷನ್ ಚಿಂತೆ: ಜಗತ್ ಪ್ರಕಾಶ್ ನಡ್ಡಾ - Nadda slams state govt

author img

By ETV Bharat Karnataka Team

Published : Apr 30, 2024, 5:52 PM IST

Updated : Apr 30, 2024, 6:49 PM IST

ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಭೆ
ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಭೆ

ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಸಿಎಂ ಬಿಎಸ್​ವೈ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಕುಮಾರ ಬಂಗಾರಪ್ಪ ಅವರು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಭೆ

ಶಿವಮೊಗ್ಗ: ನಮಗೆ ದೇಶದ ವಿಷನ್ ಚಿಂತೆಯಾದರೆ ವಿರೋಧ ಪಕ್ಷಗಳಿಗೆ ಕಮಿಷನ್ ಚಿಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಹೇಳಿದರು. ಶಿವಮೊಗ್ಗ ಹೊರವಲಯ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್‌ಷನ್ ಹಾಲ್‌ನಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಿಜೆಪಿ ಮತ್ತು ಮೈತ್ರಿ ಪಕ್ಷದ ಕೂಟಗಳಿಗೆ ದೇಶದ ಬಗ್ಗೆ ದೂರದೃಷ್ಟಿಯ ಚಿಂತೆ ಹಾಗೂ ಚಿಂತನೆ ಇದೆ. ಆದರೆ, ವಿರೋಧ ಪಕ್ಷಗಳಿಗೆ ಇದ್ಯಾವುದೂ ಇಲ್ಲ. ಅವರಿಗೆ ಕೇವಲ ಕಮಿಷನ್ ಚಿಂತೆ ಇದೆ ಎಂದು ಆರೋಪಿಸಿದರು.

ಬಿಜೆಪಿ ಇಡೀ ದೇಶವನ್ನು ಅಖಂಡ ಭಾರತವಾಗಿ ನಿರ್ಮಿಸುತ್ತಿದೆ. ಆದರೆ, ಇಂಡಿಯಾ ಒಕ್ಕೂಟ ದೇಶವನ್ನು ಇಬ್ಭಾಗ ಮಾಡುತ್ತಿದೆ. ತೆರಿಗೆಯ ವಿಷಯದಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂದು ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಿಂದೆಚೆಗೆ ರಾಷ್ಟ್ರವನ್ನು ವಿಶ್ವದ ಮುಂಚೂಣಿ ದೇಶಗಳ ಸಾಲಿಗೆ ತಂದಿದ್ದಾರೆ. ಉಜ್ವಲ ಯೋಜನೆ ಜಾರಿಯಿಂದ ಗ್ರಾಮೀಣ ಭಾಗದ ತಾಯಂದಿರು ಗ್ಯಾಸ್ ಸಂಪರ್ಕವನ್ನು ಪಡೆಯುವ ಮೂಲಕ ಉತ್ತಮ ಜೀವನವನ್ನು ಸಾಗಿಸುತ್ತಿದ್ದಾರೆ. 12 ಕೋಟಿ ಶೌಚಾಲಯವನ್ನು ನಿರ್ಮಿಸಿಕೊಡುವ ಮೂಲಕ ಕೇಂದ್ರವು ಗ್ರಾಮೀಣ ಭಾಗದ ಮಹಿಳೆಯರು ಗೌರವಯುತವಾದ ಜೀವನ ನಿರ್ವಹಿಸುವಂತೆ ಮಾಡಿದೆ. 70 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ 5 ಲಕ್ಷ ರೂ. ಆರೋಗ್ಯ ವಿಮಾ ಸೌಲಭ್ಯವನ್ನು ಪ್ರಧಾನಿ ಮೋದಿ ಜಾರಿಗೆ ತಂದಿದ್ದಾರೆ. ಇದರೊಂದಿಗೆ ರಿಕ್ಷಾ, ಟ್ರಕ್, ಬಸ್, ಚಾಲಕ ಹಾಗೂ ಕ್ಲೀನರ್ ಜಟ್ಕಾವಾಲಾ ಹೀಗೆ.. ಸಮಾಜದ ವಿವಿಧ ಹಂತಗಳಲ್ಲಿ ದುಡಿಯುತ್ತಿರುವ ಅನೇಕ ಉದ್ಯೋಗಿಗಳಿಗೆ ಆರೋಗ್ಯ ವಿಮೆ ಸೌಲಭ್ಯನವನ್ನು ಕಲ್ಪಿಸುವ ಮೂಲಕ ಸಮುದಾಯಕ್ಕೆ ಆರೋಗ್ಯ ಭದ್ರತೆಯನ್ನು ನೀಡಿದ್ದಾರೆ ಎಂದರು. ಅತ್ಯಂತ ಕ್ರಿಯಾಶೀಲ ಸಂಸದರಾಗಿರುವ ಬಿ.ವೈ. ರಾಘವೇಂದ್ರ ಅವರನ್ನು ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಮಾಡುವಂತೆ ಅವರು ಇದೇ ವೇಳೆ ಮನವಿ ಮಾಡಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ, ರಾಜ್ಯ ಸರ್ಕಾರ ಆರ್ಥಿಕವಾಗಿ, ಬರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಎಲ್ಲದಕ್ಕೂ ಕೇಂದ್ರದ ಕಡೆ ಬೆಟ್ಟು ತೋರಿಸುವ ಸಂಸ್ಕೃತಿ ಸರಿಯಲ್ಲ. ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ನಂತರ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ನಾನು ನಡೆಸಿದ ಪ್ರಯತ್ನಕ್ಕೆ ಮೋದಿ ಸರ್ಕಾರ ಹಾಗೂ ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಅತ್ಯತ್ತಮವಾಗಿ ಸ್ಪಂದಿಸಿದೆ. ಇದರ ಪರಿಣಾಮವಾಗಿ ವಿಮಾನ ನಿಲ್ದಾಣ, ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿ, ನೀರಾವರಿ ಯೋಜನೆಗಳು ಹೀಗೆ... ಹಲವಾರು ಕಾರ್ಯಗಳು ಆಗಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸ ಮಾಡಲು ನಿಮ್ಮ ಮತವನ್ನು ಕಮಲದ ಗುರುತಿಗೆ ನೀಡುವ ಮೂಲಕ ಮೋದಿಯವರನ್ನು ಬೆಂಬಲಿಸಬೇಕು ಎಂದು ಕೋರಿದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ 25 ರಿಂದ 26 ಸೀಟು ಗೆಲ್ಲುತ್ತದೆ: ಬಿ.ಎಸ್.ಯಡಿಯೂರಪ್ಪ - B S Yediyurappa

Last Updated :Apr 30, 2024, 6:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.