ಬೆಂಗಳೂರು: ತಾಯಿ ಮೇಲಿನ ಸಿಟ್ಟಿಗೆ 6 ವರ್ಷದ ಬಾಲಕಿಯನ್ನ ಅಪಹರಿಸಿ ಹತ್ಯೆ
ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಬಾಲಕಿ ಶವವಾಗಿ ಪತ್ತೆಯಾದ ಘಟನೆ ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Published : January 7, 2026 at 3:49 PM IST
ಬೆಂಗಳೂರು: ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಬಾಲಕಿ ಶವವಾಗಿ ಪತ್ತೆಯಾದ ಘಟನೆ ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳ ಮೂಲದ ಷಹನಾಜ್ ಖಾತುಂ ಹತ್ಯೆಯಾದ ಬಾಲಕಿ. ಪ್ಲಾಸ್ಟಿಕ್ ರೋಪ್ ಬಳಸಿ ಉಸಿರುಗಟ್ಟಿಸಿ ಹತ್ಯೆಯಾದ ಸ್ಥಿತಿಯಲ್ಲಿ ನಲ್ಲೂರುಹಳ್ಳಿ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿಯೇ ನೆಲೆಸಿದ್ದ ಕುಟುಂಬದ ವ್ಯಕ್ತಿಯೊಬ್ಬರ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಬಾಲಕಿ ಪೋಷಕರು ನಲ್ಲೂರುಹಳ್ಳಿ ಬಳಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ಅವರೊಂದಿಗೆ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮತ್ತೊಂದು ಕುಟುಂಬ ಹಾಗೂ ಬಾಲಕಿಯ ತಾಯಿಯ ನಡುವೆ ಇತ್ತೀಚಿಗೆ ಜಗಳವಾಗಿತ್ತು. ಈ ನಡುವೆ ಜನವರಿ 5ರಂದು ಬೆಳಗ್ಗೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು.
ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದ ಪೋಷಕರು, ಜನವರಿ 6ರಂದು ಮಧ್ಯಾಹ್ನ ವೈಟ್ಫೀಲ್ಡ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ತಡರಾತ್ರಿ ನಲ್ಲೂರುಹಳ್ಳಿಯ ದೇವಸ್ಥಾನದ ರಸ್ತೆಯಲ್ಲಿ ಪ್ಲ್ಯಾಸ್ಟಿಕ್ ಚೀಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹವದ ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಪ್ಲ್ಯಾಸ್ಟಿಕ್ ರೋಪ್ ಬಳಸಿ ಉಸಿರುಗಟ್ಟಿಸಿ ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನ ರಚಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಇವುಗಳನ್ನೂ ಓದಿ:
- ಚಿಕ್ಕಮಗಳೂರು: ಹಣದಾಸೆಗೆ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ
- ಕರ್ತವ್ಯ ಮುಗಿಸಿ ತೆರಳುತ್ತಿದ್ದ ವೈದ್ಯೆಗೆ ಕಿರುಕುಳ ನೀಡಿದ್ದ ಆರೋಪಿಯ ಬಂಧನ
2ನೇ ಪತ್ನಿಯನ್ನ ತೊರೆಯುವಂತೆ ರೌಡಿಶೀಟರ್ ಮೇಲೆ ಮೊದಲ ಪತ್ನಿಯಿಂದ ಹಲ್ಲೆ: ಎರಡನೇ ಪತ್ನಿಯನ್ನ ತೊರೆಯುವಂತೆ ಮೊದಲ ಪತ್ನಿ ತನ್ನ ಪತಿಯಾದ ರೌಡಿಶೀಟರ್ ಓರ್ವನಿಗೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಹಲ್ಲೆಗೊಳಗಾದ ರೌಡಿಶೀಟರ್ ತನ್ನ ಪತ್ನಿ ವಿರುದ್ದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.
ಜೆ. ಜೆ ನಗರದ ನಿವಾಸಿ ಸೈಯದ್ ಅಸ್ಗರ್ ಎಂಬಾತ ತನ್ನ ಪತ್ನಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಕಳ್ಳತನ, ಮಾದಕ ಪದಾರ್ಥಗಳ ಮಾರಾಟ ಪ್ರಕರಣಗಳಲ್ಲಿ ಜೈಲು ಪಾಲಾಗಿದ್ದ ಆರೋಪಿ, ಇತ್ತೀಚಿಗೆ ಜೈಲಿನಿಂದ ಹೊರಬಂದಿದ್ದ. ಆದರೆ, ಎರಡನೇ ಪತ್ನಿಯನ್ನ ತೊರೆಯುವಂತೆ ಒತ್ತಾಯಿಸಿದ್ದ ತನ್ನ ಮೊದಲನೇ ಪತ್ನಿ ಮಾರಣಾಂತಿಕವಾಗಿ ಹಲ್ಲೆಗೈದು, ಕೈ ಮುರಿದಿದ್ದಾಳೆ ಎಂದು ಸೈಯದ್ ಅಸ್ಗರ್ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಹಲ್ಲೆಗೊಳಗಾದ ಸೈಯದ್ ಅಸ್ಗರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಅವರ ಗಾಯಗೊಂಡ ಕಣ್ಣಿನ ಪಕ್ಕದಲ್ಲಿ ಹೋಲಿಗೆ ಹಾಕಿದ್ದಾರೆ. ಇದೀಗ ಅಸ್ಗರ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

