ಉಡುಪಿ: ರೆಸಾರ್ಟ್ನಲ್ಲಿ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಆರೋಪ: ಪ್ರಕರಣ ದಾಖಲು
ಉಡುಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ರೆಸಾರ್ಟ್ನಲ್ಲಿ ಯಾವುದೇ ದಾಖಲೆಗಳಿಲ್ಲದ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

Published : December 20, 2025 at 8:45 PM IST
ಉಡುಪಿ: ರೆಸಾರ್ಟ್ನಲ್ಲಿ ಯಾವುದೇ ದಾಖಲೆಗಳಿಲ್ಲದ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾರಕೂರಿನ ಸರ್ಕಾರಿ ಆಸ್ಪತ್ರೆಗೆ ಗರ್ಭಿಣಿ ವಿದೇಶಿ ಮಹಿಳೆ ಚಿಕಿತ್ಸೆಗೆಂದು ಬಂದಿದ್ದು, ಆ ವೇಳೆ ಅಲ್ಲಿನ ವೈದ್ಯರು ಆಕೆಯೊಂದಿಗೆ ದಾಖಲಾತಿಗಳನ್ನು ಕೇಳಿದ್ದರು. ಆದರೆ ಯಾವುದೇ ದಾಖಲಾತಿ ಇಲ್ಲವೆಂದು ತಿಳಿಸಿದ್ದು, ಈ ಬಗ್ಗೆ ಸರ್ಕಾರಿ ಆಸ್ಪತ್ರೆಯವರು ಸ್ಥಳೀಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೂಡಲೇ ಮಾಹಿತಿ ನೀಡಿದರು.
ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ, ರೀಪಕ್ ದಮಾಯಿ(28), ಸುನಿತ ದಮಾಯಿ(27), ಉರ್ಮಿಳ(19), ಕೈಲಾಶ್ ದಮಾಯಿ(18) ಕಪಿಲ್ ದಮಾಯಿ(19), ಸುನಿತ ದಮಾಯಿ(21) ಹಾಗೂ 3 ಮಂದಿ ಸಣ್ಣ ಮಕ್ಕಳು, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್ನಲ್ಲಿ ಅಕ್ರಮವಾಗಿ ನೆಲೆಸಿರುವುದು ತಿಳಿದು ಬಂದಿದೆ.
ಪ್ರಕರಣದ ಬಗ್ಗೆ ಎಸ್ಪಿ ಪ್ರತಿಕ್ರಿಯೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಇವರುಗಳು ಭಾರತೀಯ ರಾಷ್ಟ್ರೀಯತೆಯನ್ನು ಹೊಂದಿಲ್ಲ, ಯಾವ ದೇಶದವರು ಎಂಬುದಕ್ಕೆ ಇವರಲ್ಲಿ ಯಾವುದೇ ದಾಖಲೆಗಳೂ ಇಲ್ಲ. ಪ್ರಸ್ತುತ ಇವರು ಯಾವ ದೇಶದ ಪ್ರಜೆಗಳು ಎಂದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಇವರು ಯಾವುದೋ ರಾಷ್ಟ್ರದ ಪ್ರಜೆಗಳಾಗಿದ್ದು, ಅವರಲ್ಲಿ ಯಾವುದೇ ಐಡೆಂಟಿಟಿ ಕಾರ್ಡ್, ಜನ್ಮ ದಾಖಲೆ, ಪಾಸ್ಪೋರ್ಟ್, ಪ್ರಯಾಣ ದಾಖಲೆ ಹಾಗೂ ವೀಸಾ ಇಲ್ಲದೇ ಅಕ್ರಮವಾಗಿ ಭಾರತ ಪ್ರವೇಶಿಸಿರುವ ವಿದೇಶಿಗರಾಗಿದ್ದಾರೆ ಎಂದರು.
ಯಾವ ದೇಶದಿಂದ ಬಂದಿರುವ ಬಗ್ಗೆ ಹಾಗೂ ಯಾವ ದೇಶದ ಪ್ರಜೆಗಳು ಎಂದು ತಿಳಿಸಲು ಅವರಲ್ಲಿ ಯಾವುದೇ ದಾಖಲಾತಿಗಳು ಇಲ್ಲ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಯಾವುದೇ ದೇಶದ ಪ್ರಜೆಗಳು ಅಕ್ರಮವಾಗಿ ದೇಶದಲ್ಲಿ ವಾಸಿಸುವುದು ದೇಶದ ಆಂತರಿಕ ಭದ್ರತೆ ಮಾರಕವಾಗುವ ಸಾಧ್ಯತೆ ಇರುವುದರಿಂದ ಇಂತಹರವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ರೆಸಾರ್ಟ್, ಲಾಡ್ಜ್ಗಳು ಯಾವುದೇ ಮಾಹಿತಿಗಳಿಲ್ಲದ ವ್ಯಕ್ತಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಅಂತಹ ರೆಸಾರ್ಟ್,ಲಾಡ್ಜ್ಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರೆಸಾರ್ಟ್, ಲಾಡ್ಜ್ಗಳಲ್ಲಿ ಯಾವುದೇ ದೇಶದ ಪ್ರಜೆಗಳು ಬಂದಲ್ಲಿ ಅವರಿಂದ ಇ - ಫಾರ್ಮ್ ಪಡೆದು ಜಿಲ್ಲಾ ಪೊಲೀಸ್ ಕಚೇರಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಯಾವುದೇ ದೇಶದ ಪ್ರಜೆ ಬಂದಿದ್ದು, ಅವರಲ್ಲಿ ಸಮರ್ಪಕ ದಾಖಾಲಾತಿ ಇಲ್ಲದೇ ಇದ್ದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ರೆಸಾರ್ಟ್, ಲಾಡ್ಜ್ಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಮ್ಯಾನೇಜರ್ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಸ್ಪಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಇವುಗಳನ್ನೂ ಓದಿ:

