ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮುನ್ನ ವರದಿ ಸಲ್ಲಿಕೆ ಮಾಡಿರುವುದು ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ.

Published : May 27, 2026 at 8:29 PM IST
ಬೆಂಗಳೂರು: ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷನಿಕ ಸಮೀಕ್ಷೆಯ ವರದಿಯನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್ ನಾಯ್ಕ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮುನ್ನ ವರದಿ ಸಲ್ಲಿಕೆ ಮಾಡಿರುವುದು ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಕುರಿತಂತೆ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ಮತ್ತು ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಸಿದ್ದ ವರದಿಗಳ ಕುರಿತಂತೆ ಪ್ರಬಲ ಸಮುದಾಯಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಧುಸೂದನ್ ಆರ್ ನಾಯ್ಕ್ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ಮಾಡಿ ಮರು ಸಮೀಕ್ಷೆ ನಡೆಸಬೇಕು ಎಂದು ಸರ್ಕಾರ ಸೂಚನೆ ನೀಡಿತ್ತು. ಸಮೀಕ್ಷೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಎಂ.ಸಿ. ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ, ಸದಸ್ಯ ಕಾರ್ಯದರ್ಶಿ ದಯಾನಂದ್, ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ, ಡಿ.ಎನ್.ನಾಯಕ್ ಉಪಸ್ಥಿತರಿದ್ದರು.
ಈ ಕುರಿತು ಈಟಿವಿ ಭಾರತ್ ಜೊತೆ ಮಾತನಾಡಿದ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್, ಹಿಂದುಳಿದ ವರ್ಗಗಳ ಕುರಿತಂತೆ ಸಿದ್ದಪಡಿಸಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ವರದಿಯಲ್ಲಿನ ಅಂಶಗಳು, ಶಿಫಾರಸ್ಸುಗಳನ್ನು ಬಹಿರಂಗ ಪಡಿಸುವುದಕ್ಕೆ ಅವಕಾಶವಿಲ್ಲ. ವರದಿಯು ಇದೀಗ ಸರ್ಕಾರದ ಸ್ವತ್ತಾಗಿದೆ ಎಂದು ತಿಳಿಸಿದ್ದರು.
ಈ ಹಿಂದೆ ನಡೆದಿದ್ದ ಸಮೀಕ್ಷೆ: 2013-2018ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜ್ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿತ್ತು. ರಾಜ್ಯ ಸರ್ಕಾರ ಈ ಸಮೀಕ್ಷೆಗೆ 160 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿತ್ತು.
ಈ ವರದಿಯನ್ನು 2023 ರಲ್ಲಿ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜ್ ವರದಿಯ ದತ್ತಾಂಶಗಳನ್ನು ಆಧರಿಸಿ, ಪರಿಷ್ಕೃತ ಅಂತಿಮ ವರದಿಯನ್ನು ಸಿದ್ದಪಡಿಸಿ 2024ರ ಫೆಬ್ರವರಿ 29 ಎಂದು ಸಲ್ಲಿಸಿದ್ದರು.
ಈ ವರದಿ ಸೋರಿಕೆಯಾಗಿ ಬಹಿರಂಗಗೊಂಡ ಬಳಿಕ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಬಳಿಕ ಮುಸ್ಲಿಮರು ಜನಸಂಖ್ಯೆ ಎರಡನೇ ದೊಡ್ಡ ಸಮುದಾಯವಾಗಿ ಹೊರಹೊಮ್ಮಿದ್ದಾರೆ ಎನ್ನಲಾಗಿತ್ತು. ಅಲ್ಲದೇ, ಹಿಂದುಳಿದ ವರ್ಗಗಳು, ಕುರುಬ ಹಾಗೂ ಈಡಿಗ ಸೇರಿದಂತೆ ಇತರ ಹಿಂದುಳಿದ ವರ್ಗಗಳ ಜನಸಂಖ್ಯೆಯೂ ಗಣನೀಯವಾಗಿದೆ ಎಂಬ ಅಂಶಗಳಿದ್ದವು ಇದಕ್ಕೆ ಮೇಲ್ವರ್ಗದ ಜಾತಿಗಳಿಂದ ತೀರ್ವ ವಿರೋಧವ್ಯಕ್ತವಾಗಿತ್ತು. ಅಲ್ಲದೇ, ವರದಿನ್ನು ಸ್ವೀಕರಿಸಬಾರದು ಎಂದು ಕೂಗು ಕೇಳಿ ಬಂದಿತ್ತು. ಆದ್ದರಿಂದ ಮರು ಸಮೀಕ್ಷೆಗೆ ಆದೇಶ ಮಾಡಲಾಗಿತ್ತು. ಇದೀಗ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಿಕರಿಸಿದ್ದಾರೆ.
ಇವುಗಳನ್ನು ಓದಿ:
ಸಾಲಗಾರನಲ್ಲದ ಬಾಡಿಗೆದಾರ 'ಸರ್ಫೇಸಿ ಕಾಯ್ದೆ'ಯಡಿ ಮೇಲ್ಮನವಿ ಸಲ್ಲಿಸಲು ಪೂರ್ವ ಠೇವಣಿ ಇಡುವುದು ಕಡ್ಡಾಯವಲ್ಲ: ಹೈಕೋರ್ಟ್
ಎಂಡಿಎಂಎ ಮಾದಕ ವಸ್ತುಗಳ ಮಾರಾಟ: ನೈಜೀರಿಯಾ ಪ್ರಜೆಯ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

