ಐಪಿಎಸ್ ಅಧಿಕಾರಿ ಡಾ. ರಾಮಚಂದ್ರ ರಾವ್ ಅಮಾನತು ವಾಪಸ್: ಸೇವೆಗೆ ಮರು ಸೇರ್ಪಡೆಗೊಳಿಸಿ ಆದೇಶ
ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

Published : May 6, 2026 at 9:27 PM IST
ಬೆಂಗಳೂರು : ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ.ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಅವರನ್ನ ಸೇವೆಗೆ ಮರು ಸೇರ್ಪಡೆಗೊಳಿಸಲಾಗಿದ್ದು, ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಹುದ್ದೆಗೆ ನಿಯೋಜನೆಗೊಳಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಡಾ. ಕೆ.ರಾಮಚಂದ್ರ ರಾವ್ ಅವರು ಸಮವಸ್ತ್ರ ಧರಿಸಿ, ತಮ್ಮ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸರ್ಕಾರಿ ಕಚೇರಿಯಲ್ಲಿ, ಉನ್ನತ ದರ್ಜೆಯ ಅಧಿಕಾರಿಯೊಬ್ಬರು ಇಂತಹ ಕೃತ್ಯವೆಸಗಿರುವುದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ಜನವರಿ 19ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿತ್ತು. ಬಳಿಕ ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನ ಪ್ರಾರಂಭಿಸಲಾಗಿತ್ತು.
ಆದರೆ, ಆಲ್ ಇಂಡಿಯಾ ಸರ್ವಿಸ್ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.
ಇದನ್ನೂ ಓದಿ: ಮಹಿಳೆಯರೊಂದಿಗೆ ಡಿಜಿಪಿ ರಾಮಚಂದ್ರರಾವ್ ಅಸಭ್ಯ ವರ್ತನೆಯ ವಿಡಿಯೋ ಅಸಲಿ: ಸರ್ಕಾರಕ್ಕೆ ಪೊಲೀಸ್ ಇಲಾಖೆ ವರದಿ
ಪೊಲೀಸ್ ಸಮವಸ್ತ್ರದಲ್ಲಿ ಕಚೇರಿಯಲ್ಲೇ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅಸಭ್ಯ ವರ್ತನೆ ತೋರಿರುವ ಆರೋಪ ಸಂಬಂಧ ಕಳೆದ ಜನವರಿಯಲ್ಲಿ ವಿಡಿಯೋ ವೈರಲ್ ಆಗಿ ಸಂಚಲನ ಸೃಷ್ಟಿಸಿತ್ತು. ಇದರಿಂದ ಪೊಲೀಸ್ ಇಲಾಖೆ ತೀವ್ರ ಮುಜುಗರಕ್ಕೀಡಾಗಿತ್ತು. ಈ ವೇಳೆ, ಪ್ರತಿಕ್ರಿಯಿಸಿದ್ದ ರಾವ್, ತಮ್ಮ ತೇಜೋವಧೆ ಮಾಡಲು ಕಿಡಿಗೇಡಿಗಳು ಎಐ ವಿಡಿಯೋ ಮಾಡಿದ್ದಾರೆ ಎಂದು ಹೇಳಿದ್ದರು.
ರಾವ್ ಅವರನ್ನು ಕೂಡಲೇ ಅಮಾನತು ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಗೃಹ ಇಲಾಖೆ, ಎಡಿಜಿಪಿ ಆರ್.ಹಿತೇಂದ್ರ ಅವರ ನೇತೃತ್ವದ ತಂಡ ರಚಿಸಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು.

