'ಯುದ್ಧಪೀಡಿತ ದೇಶಗಳಲ್ಲಿನ ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆ, ಸಹಾಯವಾಣಿ ಆರಂಭಿಸಲು ಸೂಚನೆ'
ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Published : March 1, 2026 at 9:56 AM IST
|Updated : March 1, 2026 at 10:07 AM IST
ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಕತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.
ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ…
— Siddaramaiah (@siddaramaiah) February 28, 2026
ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದಿದ್ದಾರೆ.
ಬಳ್ಳಾರಿಯ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
ಸಿಎಂಗೆ ನಾಗೇಂದ್ರ ಮಾಹಿತಿ: ದುಬೈನಲ್ಲಿ ಬಳ್ಳಾರಿ ಪ್ರವಾಸಿಗರು ಸಿಲುಕಿದ್ದು, ಅವರನ್ನು ರಕ್ಷಿಸುವಂತೆ ಸಿಎಂ ಸಿದ್ದರಾಯ್ಯ ಅವರಿಗೆ ಫೋನ್ ಮೂಲಕ ಮಾಜಿ ಸಚಿವ ನಾಗೇಂದ್ರ ಅವರು ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಸಿಎಂ, ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಊಟಕ್ಕೂ ಸಮಸ್ಯೆ, ಭಯದ ವಾತಾವರಣ: ಫೆಬ್ರವರಿ 24ರಂದು ಬಳ್ಳಾರಿಯ 35 ಮತ್ತು ಚಿತ್ರದುರ್ಗದ 15 ಜನರು ದುಬೈಗೆ ಪ್ರವಾಸಕ್ಕೆಂದು ತೆರಳಿದ್ದರು. ಫೆ.28ಕ್ಕೆ ಹಿಂತಿರುಗಬೇಕಿತ್ತು. ಆದರೆ ಯುದ್ಧದಿಂದಾಗಿ ವಿಮಾನ ಸ್ಥಗಿತಗೊಂಡಿದ್ದು, ಏರ್ಪೋರ್ಟ್ನಿಂದ ಮರಳಿ ಹೋಟೆಲ್ಗೆ ಹೋಗಿದ್ದು, ಸುರಕ್ಷಿತವಾಗಿದ್ದಾರೆ.
ಭಯದ ವಾತಾವರಣ ಇದೆ. ಹಣ ಕೂಡ ಖಾಲಿಯಾಗಿದ್ದು, ಊಟಕ್ಕೂ ಸಮಸ್ಯೆ ಆಗುತ್ತಿದೆ. ಯುದ್ಧದ ಭಯದಿಂದ ಸರಿಯಾಗಿ ನಿದ್ದೆ ಕೂಡ ಮಾಡಿಲ್ಲ. ಯಾವುದೇ ಕಾರಣಕ್ಕೂ ಕಿಟಕಿ, ಬಾಗಿಲು ತೆರೆಯದಂತೆ ಮತ್ತು ಮನೆಯಿಂದ ಹೊರಗಡೆ ಬರದಂತೆ ಅಲ್ಲಿ ಸೂಚಿಸಲಾಗಿದೆ ಎಂದು ಪ್ರವಾಸಿಗರು ಹೇಳಿಕೊಂಡಿದ್ದಾರೆ. ಆದ್ದರಿಂದ ಅಲ್ಲಿದ್ದವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕು ಎಂದು ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅವರನ್ನು ರಾಮಲಿಂಗಪ್ಪ ಅವರು ಮನವಿ ಮಾಡಿದ್ದಾರೆ.
ಇವುಗಳನ್ನೂ ಓದಿ:

