ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಉಪನ್ಯಾಸಕನ ಬಂಧನ
ಸಂತ್ರಸ್ತೆ ಹಾಗೂ ಆಕೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಉಪನ್ಯಾಸಕನ ವಿರುದ್ಧ ದೂರು ದಾಖಲಾಗಿದ್ದು, ಬಂಧಿಸಲಾಗಿದೆ.

Published : July 2, 2026 at 8:02 PM IST
ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಕಾಲೇಜೊಂದರ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ (45) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಸಂತ್ರಸ್ತೆ ಹಾಗೂ ಆಕೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಉಪನ್ಯಾಸಕನೊಂದಿಗೆ ಪರಿಚಯ ಬೆಳೆದಿದ್ದು, ಬಳಿಕ ಅದು ಪ್ರೇಮ ಸಂಬಂಧಕ್ಕೆ ತಿರುಗಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಹಲವು ಬಾರಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಲಾಗಿದೆ.
ಅಲ್ಲದೇ, ವಿದ್ಯಾರ್ಥಿನಿಯ ವಿರೋಧದ ನಡುವೆಯೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಸದ್ಯ ವ್ಯಾಸಂಗ ಪೂರ್ಣಗೊಳಿಸಿರುವ ಯುವತಿ ನೀಡಿದ ದೂರಿನ ಮೇರೆಗೆ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಜೀವ ಬೆದರಿಕೆ ಆರೋಪ
ಮತ್ತೊಂದು ಕಡೆ, ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಲ್ಲದೇ ಮನೆಗೆ ನುಗ್ಗಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿ ವರದಿಯಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಗೆ ಚಿಂತಾಮಣಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿ ತನ್ನ ಡ್ಯಾನ್ಸ್ ಕ್ಲಾಸ್ ಮುಗಿಸಿ ಸಂಜೆ 4.30ರ ಸುಮಾರಿಗೆ ತಮ್ಮ ದ್ವಿಚಕ್ರ ವಾಹನದ ಬಳಿ ತೆರಳುತ್ತಿದ್ದ ವೇಳೆ ಇಬ್ಬರು ಯುವಕರು ಚುಡಾಯಿಸಿದ್ದರು. ಇದಕ್ಕೆ ವಿದ್ಯಾರ್ಥಿನಿ ಪ್ರಶ್ನಿಸಿದಾಗ ಆರೋಪಿಗಳು ಅನುಚಿತವಾಗಿ ವರ್ತಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆತ್ಮರಕ್ಷಣೆಗಾಗಿ ಆಕೆ ಆರೋಪಿಗಳಲ್ಲಿ ಒಬ್ಬನಿಗೆ ಕೆನ್ನೆಗೆ ಹೊಡೆದು ಅಲ್ಲಿಂದ ಮನೆಗೆ ತೆರಳಿದ್ದು, ನಡೆದ ಘಟನೆಯನ್ನು ತಾಯಿಗೆ ದೂರವಾಣಿಕರೆಯಲ್ಲಿ ತಿಳಿಸಿದ್ದಾರೆ. (ಘಟನೆ ದಿನ ಮನೆಯಲ್ಲಿ ಸಂತ್ರಸ್ತೆ ಹಾಗೂ ಆಕೆಯ ಸಹೋದರಿ ಮಾತ್ರ ಇದ್ದರು).
ಅದೇ ದಿನ ರಾತ್ರಿ ಸುಮಾರು 8.30ರ ವೇಳೆಗೆ ಚುಡಾಯಿಸಿದ ಇಬ್ಬರು ಯುವಕರು ಸೇರಿದಂತೆ ಸುಮಾರು 10 ಮಂದಿ ವಿದ್ಯಾರ್ಥಿನಿಯ ಮನೆಗೆ ನುಗ್ಗಿ, "ನಮ್ಮ ಮುಂದೆಯೇ ನಮಗೆ ಹೊಡೆದು ತಳ್ಳುತ್ತೀಯಾ? ನಿನಗೆ ಎಷ್ಟು ಧೈರ್ಯ?" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾಳೆ.

