ಪರ್ಯಾಯ ಎಸ್ಐಆರ್ಗೆ ಮುಂದಾದ ರಾಜ್ಯ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ
ರಾಜ್ಯ ಚುನಾವಣಾ ಆಯೋಗವು ಜೂ.19ರಂದು ಹೊರಡಿಸಿರುವ ಆದೇಶ ರದ್ದುಪಡಿಸಲು ಕೋರಿ ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ನಿವಾಸಿಗಳಾದ ವಿವೇಕ್ ಮತ್ತಿತರರು ಹೈಕೋರ್ಟ್ಗೆ ತರಕಾರು ಅರ್ಜಿ ಸಲ್ಲಿಸಿದ್ದಾರೆ.


Published : July 6, 2026 at 10:12 PM IST
ಬೆಂಗಳೂರು: ಕೇಂದ್ರ ಚುನಾವಣೆ ಆಯೋಗ ದೇಶಾದ್ಯಂತ ಹಮ್ಮಿಕೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಚಾಲ್ತಿಯಲ್ಲಿರುವಾಗಲೇ, ರಾಜ್ಯ ಚುನಾವಣೆ ಆಯೋಗ ಬೆಂಗಳೂರಿನ ಕೆಲವು ವಾರ್ಡ್ಗಳಿಗೆ ಪ್ರತ್ಯೇಕ ಹಾಗೂ ಸಮಾನಾಂತರ ಪರಿಷ್ಕರಣೆಗೆ ಆದೇಶಿಸಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಗ್ರೆಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಪರ್ಯಾಯ ಎಸ್ಐಆರ್ ನಡೆಸಲು ರಾಜ್ಯ ಚುನಾವಣಾ ಆಯೋಗವು ಜೂ.19ರಂದು ಹೊರಡಿಸಿರುವ ಆದೇಶ ರದ್ದುಪಡಿಸಲು ಕೋರಿ ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ನಿವಾಸಿಗಳಾದ ವಿವೇಕ್ ಮತ್ತಿತರರು ಹೈಕೋರ್ಟ್ಗೆ ತರಕಾರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಕೇಂದ್ರ ಸರ್ಕಾರವು ಎಸ್ಐಆರ್ ನಡೆಸುವುದಾಗಿ 2025ರ ಅಕ್ಟೋಬರ್ 27ರಂದು ಪ್ರಕಟಿಸಿತ್ತು. ಅದರಂತೆ 2026ರ ಜೂ.16ರಂದು ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಫ್ರೀಜ್ ಮಾಡಿತ್ತು. ಇದಾದ ಮೂರೇ ದಿನಗಳಲ್ಲಿ ಅಂದರೆ ಜೂ.19 ರಾಜ್ಯ ಚುನಾವಣಾ ಆಯೋಗ ಸಹ ಜಿಬಿಎಯ ಕೆಲವು ವಾರ್ಡ್ ಗಳ ಮತಪಟ್ಟಿ ಪರಿಷ್ಕರಣೆ ನಡೆಸಲು ಆದೇಶಿಸಿದೆ.
ಅಲ್ಲದೇ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂ.26ರಿಂದ ಈಗಾಗಲೇ ಜಿಬಿಎ ಸೇರಿ ರಾಜ್ಯಾದ್ಯಾಂತ ಎಸ್ಐಆರ್ ಮನೆ ಮನೆ ಸರ್ವೇ ಆರಂಭವಾಗಿದೆ. ಒಂದೇ ಅವಧಿಯಲ್ಲಿ ಪ್ರತ್ಯೇಕವಾಗಿ ಪರ್ಯಾಯ ಎಸ್ ಐ ಆರ್ ನಡೆಸುವುದರಿಂದ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಲಿವೆ. ಮೇಲಾಗಿ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಚುನಾವಣಾ ಆಯೋಗವು ಜೂ.19ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಒಂದೇ ಕೆಲಸಕ್ಕಾಗಿ ಇಬ್ಬರು ಅಧಿಕಾರಿಗಳನ್ನು ನಿಯೋಜಿಸಿ, ಪ್ರತ್ಯೇಕ ತರಬೇತಿ, ಮತದಾರರ ಪಟ್ಟಿ ಮುದ್ರಣ ಹಾಗೂ ಇವಿಎಂ ಮೂಲಸೌಕರ್ಯಗಳನ್ನು ಸಿದ್ಧಪಡಿಸುತ್ತಿರುವುದು ಸಾರ್ವಜನಿಕ ತೆರಿಗೆ ಹಣದ ದುರುಪಯೋಗ ಮತ್ತು ಅಪಾರ ಸಂಪನ್ಮೂಲಗಳ ವ್ಯರ್ಥಕ್ಕೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನು ಓದಿ:
ಎಲ್ಕೆಜಿ ವಿದ್ಯಾರ್ಥಿಯನ್ನು ಕೋಲಿನಿಂದ ಹೊಡೆದ ಶಿಕ್ಷಕಿ: ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

