ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿಜಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಈ ಮೂಲಕ ಕಾಂಗ್ರೆಸ್ ಶಾಸಕರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Published : February 27, 2026 at 2:54 PM IST
ನವದೆಹಲಿ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರು ಬಿಡುಗಡೆ ಆಗಲಿದ್ದಾರೆ.
ಬೆಂಬಲಿಗರಿಂದ ಸಂಭ್ರಮಾಚರಣೆ: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದಲ್ಲಿ ಸಂಭ್ರಮಾಚರಿಸಿದರು. ಡಿಸಿ ಕಚೇರಿ ಎದುರು ಸೇರಿದ ಶಾಸಕರ ಬೆಂಬಲಿಗರು, ವಿನಯ್ ಪರ ಘೋಷಣೆ ಕೂಗಿ ಸಂಭ್ರಮಿಸಿದರು
ಪ್ರಕರಣದ ವಿವರ: ಯೋಗೇಶ್ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬಳಿಕ ಸಿಬಿಐ ಕೈಗೆತ್ತಿಕೊಂಡು ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಿತ್ತು. ಬಳಿಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಸಿಬಿಐ, ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಜಾಮೀನು ರದ್ದುಪಡಿಸಿದ್ದರಿಂದ 2025ರ ಜೂ.13ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ.
ಬಳಿಕ ಜಾಮೀನು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಕಳೆದ ಡಿ.8 ರಂದು ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ಕೂಡ ಜಾಮೀನು ಅರ್ಜಿ ವಜಾಗೊಳಿಸಿತ್ತು. ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ವರ್ಷ ಜೂನ್ನಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿದ್ದ ಸುಪ್ರೀಂಕೋರ್ಟ್:
2016 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ 2025 ಜೂನ್ 6ರ ಶುಕ್ರವಾರ ರದ್ದುಗೊಳಿಸಿತ್ತು. ಇದೇ ವೇಳೆ ವಿಚಾರಣಾ ನ್ಯಾಯಾಲಯದ ಎದುರು ಶರಣಾಗಲು ಒಂದು ವಾರಗಳ ಕಾಲಾವಕಾಶ ಕೂಡಾ ನೀಡಿತ್ತು.
ಒಂದು ವಾರದ ಅವಧಿಯಲ್ಲಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ / ಜೈಲು ಪ್ರಾಧಿಕಾರದ ಮುಂದೆ ಶರಣಾಗುವಂತೆ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಕುಲಕರ್ಣಿ ಮತ್ತು ಇತರ ಆರೋಪಿಗಳು ತಮ್ಮ ಮೇಲೆ ವಿಧಿಸಲಾದ ಷರತ್ತುಗಳನ್ನು ಉಲ್ಲಂಘಿಸಿ ಸಾಕ್ಷಿಗಳನ್ನು ಸಂಪರ್ಕಿಸಲು ಮತ್ತು ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್ ಗಮನಿಸಿತ್ತು.
ಸಿಬಿಐ ಸಲ್ಲಿಸಿದ ಮೇಲ್ಮನವಿ ಅಂಗೀಕರಿಸಿದ್ದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಸಂದರ್ಭಗಳ ಸಂಪೂರ್ಣತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿವಾದಿ ವಿನಯ್ ಕುಲಕರ್ಣಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಬೇಕು ಎಂದು ಈ ನ್ಯಾಯಾಲಯವು ನಿರ್ಧರಿಸಿದೆ. ಆರೋಪಿ ಸಂಖ್ಯೆ 15 ಅಂದರೆ, ಪ್ರತಿವಾದಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ. 1 ವಾರದ ಅವಧಿಯಲ್ಲಿ ಪ್ರತಿವಾದಿಯು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯ / ಜೈಲು ಪ್ರಾಧಿಕಾರದ ಮುಂದೆ ಶರಣಾಗಬೇಕು. ನಮ್ಮ ಯಾವುದೇ ಅವಲೋಕನಗಳಿಂದ ಪ್ರಭಾವಿತರಾಗದೇ, ವಿಚಾರಣೆಯನ್ನು ತ್ವರಿತವಾಗಿ ಮುಗಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು.

